ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳಲ್ಲಿ ಅನುಮೋದಿತ ಹುದ್ದೆಗಳ ನೇರ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಬೀಳಲಿದೆ.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣದಂತೆ ಈಗಾಗಲೇ ನಿಗದಿಯಾದ ರೋಸ್ಟರ್ ಬಿಂದು ಆಧರಿಸಿ ಅನುಮೋದಿತ ಹುದ್ದೆಗಳ ನೇರ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಮತ್ತು ಕಾಲಮಿತಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ.
ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನ ಆಧರಿಸಿ ಹೊರಡಿಸಿದ ಈ ಸುತ್ತೋಲೆಯಿಂದಾಗಿ ಕಳೆದ ವರ್ಷ ಅಕ್ಟೋಬರ್ ನಿಂದ ಅಧಿಕೃತವಾಗಿ ಸ್ಥಗಿತಗೊಂಡಿದ್ದ ಎಲ್ಲಾ ನೇರ ನೇಮಕಾತಿ ಪ್ರಕ್ರಿಯೆಗೆ ಹೊಸದಾಗಿ ಚಾಲನೆ ಸಿಗಲಿದೆ.
ಕೃಷಿ, ಪಶು ಸಂಗೋಪನೆ, ಶಿಕ್ಷಣ, ಪೊಲೀಸ್, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸುಮಾರು 80,000ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಸಂಬಂಧಿತ ನೇಮಕಾತಿ ಪ್ರಾಧಿಕಾರಗಳಿಂದ ಸರಣಿ ಅಧಿಸೂಚನೆಗಳು ಶೀಘ್ರವೇ ಹೊರಬೀಳಲಿವೆ. ಈ ಮೂಲಕ ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕ ಪ್ರಕ್ರಿಯೆ ಶುರುವಾಗಲಿದೆ ಎಂದು ಹೇಳಲಾಗಿದೆ.