ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ 2026 -27ನೇ ಸಾಲಿನಲ್ಲಿ ಕೇಂದ್ರ ಮಾದರಿ ವೇತನ ಶ್ರೇಣಿ ಜಾರಿಗೊಳಿಸುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೇಂದ್ರದ ವೇತನ ಶ್ರೇಣಿ ಜಾರಿಗೊಳಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನವನ್ನು ಸಂಘಟನೆ ಮಾಡುತ್ತಿದೆ. ಅದು ಜಾರಿಯಾಗುವ ವಿಶ್ವಾಸವಿದೆ ಎಂದರು.
ಸಂಘದ ಒತ್ತಡ ಹಿನ್ನೆಲೆಯಲ್ಲಿ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಾಧಕ- ಬಾಧಕಗಳ ಅಧ್ಯಯನಕ್ಕೆ ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಶೀಘ್ರವೇ ವರದಿ ಸಲ್ಲಿಸಲಿದ್ದು, ವರದಿಯಂತೆ ಸರ್ಕಾರ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.
ಸರ್ಕಾರಿ ನೌಕರರು ಬ್ಯಾಂಕುಗಳಲ್ಲಿ ವೇತನ ಆಧಾರಿತ ಬ್ಯಾಂಕ್ ಖಾತೆ ತೆರೆಯಲು ತಕ್ಷಣ ಮುಂದಾಗಬೇಕು. ಇದರಿಂದ 1.20 ಕೋಟಿ ರೂಪಾಯಿ ಮೊತ್ತದ ವಿಮಾ ಸೌಲಭ್ಯ, ಮಕ್ಕಳ ಶಿಕ್ಷಣಕ್ಕೆ ಸಾಲ ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.