ಬೆಂಗಳೂರು: ಸಾರಿಗೆ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷಾ ಮನವಿ ಮಾಡಿದ್ದಾರೆ.
ಹೈಕೋರ್ಟ್ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಕೂಡ ಬೇಡಿಕೆಗಳ ಈಡೇರಿಕೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ಸಾರಿಗೆ ಸಿಬ್ಬಂದಿ ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳಬಾರದು ಎಂದು ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಎಂಡಿ ಅಕ್ರಮ್ ಪಾಷಾ ಮನವಿ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಆನಂತ ಸುಬ್ಬರಾವ್, ನ್ಯಾಯಾಲಯದ ಆದೇಶ ಏನಿದೆ ಎಂದು ನಮಗೆ ಗೊತ್ತಿಲ್ಲ. ಆದರೆ ನಾಳೆ ನಮ್ಮ ಮುಷ್ಕರ ನಡೆಯುತ್ತದೆ. ವಕೀಲರ ಅಭಿಪ್ರಾಯ ಪಡೆದುಕೊಂಡು ತೀರ್ಮಾನ ಮಾಡುತ್ತೇವೆ. ಮುಷ್ಕರ ವಾಪಸ್ ಪಡೆಯುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಬಸ್ ಗಳನ್ನು ಡಿಪೋಗಳಲ್ಲಿ ನಿಲ್ಲಿಸುತ್ತೇವೆ. ಯಾವುದೇ ನೌಕರರು ನಾಳೆ ಬಸ್ ಗಳನ್ನು ಓಡಿಸುವುದಿಲ್ಲ. ಸರ್ಕಾರದ ಬೆದರಿಕೆಗೆ ಹೆದರಬೇಡಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಕರೆ ನೀಡಿದ್ದಾರೆ.
ಮುಷ್ಕರದ ಬಗ್ಗೆ 22 ದಿನಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಇಂದು ಸಭೆ ಕರೆದಿದ್ದಾರೆ. ಬಾಕಿ ಹಣ ಕೊಡಬೇಕು, ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಬೇಕು. ಬೇಕಿದ್ದರೆ ಕಂತಿನ ರೂಪದಲ್ಲಿ ಬಾಕಿ ಕೊಡಿ ಎಂದು ಮನವಿ ಮಾಡಿದ್ದೇವೆ. 12 ಬೇಡಿಕೆಗಳ ಪೈಕಿ ಎರಡು ಪ್ರಮುಖ ಬೇಡಿಕೆಗಳನ್ನಾದರೂ ಈಡೇರಿಸಬೇಕಿತ್ತು. ಅಧಿವೇಶನದವರೆಗೆ ಮುಷ್ಕರ ಮುಂದೂಡಿ ಎಂದು ಹೇಳಿದ್ದಾರೆ. ನಾವು ಒಪ್ಪಿಲ್ಲ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ ಸಾರಿಗೆ ಮುಷ್ಕರ ನಡೆಸಲಾಗುವುದು ಎಂದು ಹೇಳಿದ್ದಾರೆ.