ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದಿನಿಂದಲೇ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಲ್ಲಿ ಈಡೇರಿಕೆ ಒತ್ತಾಯಿಸಿ ಆ. 5ರಿಂದ ಸಾರಿಗೆ ನೌಕರರು ಮುಷ್ಕರ ಕೈಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಇಂದಿನಿಂದಲೇ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದು, ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ. ಫ್ರೀಡಂಪಾರ್ಕ್ ನಲ್ಲಿ ನೌಕರರು ಮುಷ್ಕರ ನಡೆಸಿ ಸರ್ಕಾರದ ಗಮನ ಸೆಳೆಯಲಿದ್ದಾರೆ.
ಕಳೆದ ವಾರ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಸಾರಿಗೆ ನೌಕರ ಸಂಘಟನೆಯ ಪ್ರಮುಖರು ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳ ನಡುವೆ ನಡೆದ ಸಭೆ ವಿಫಲವಾಗಿದ್ದು, ಮುಷ್ಕರ ನಡೆಸಲು ನಿರ್ಧರಿಸಿದ್ದರು.
ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇತ್ಯರ್ಥಪಡಿಸಲು ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ ಅವರು ಸೋಮವಾರ ಸಂಧಾನ ಸಭೆ ನಡೆಸಿದ್ದರು. ಆದರೆ, ಸಭೆಯಲ್ಲಿ ನೌಕರರ ಬೇಡಿಕೆ ಈಡೇರಿಕೆಗಳ ಕುರಿತು ಸಾರಿಗೆ ನಿಗಮಗಳ ಅಧಿಕಾರಿಗಳು ಯಾವುದೇ ಸ್ಪಷ್ಟ ಭರವಸೆ ನೀಡಿರಲಿಲ್ಲ.