ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಬೇಡವೇ ಬೇಡ ಎಂದು ಖಡಕ್ ಆಗಿ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಸಚಿವ ಸ್ಥಾನ ಬೇಡ ಎಂದು ಈಗಾಗಲೇ ಹೇಳಿದ್ದೇನೆ. ಡಿ.ಕೆ ಸಂಪುಟದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ. ಬೇರೆಯವರಿಗೆ ಅವಕಾಶ ಕೊಡಲಿ ಎಂದರು.
ನನಗೆ ಯಾವ ಸ್ಥಾನವೂ ಬೇಕಾಗಿಲ್ಲ, ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳುತ್ತಿಲ್ಲ. ಅದೇನು ಅವರು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ಎಂದು ಪ್ರಶ್ನಿಸಿದರು. ನನಗೆ ಅಧಿಕಾರ ದಾಹ ಇಲ್ಲ. ಶಿವಕುಮಾರ್ ಸಿಎಂ ಆದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ. ನನ್ನ ಹೇಳಿಕೆಗೆ ನಾನು ಬದ್ಧ ಎಂದು ಹೇಳಿದರು.
