ಬೆಂಗಳೂರು: ಕನ್ನಡ ಭಾಷೆಗೆ, ಕನ್ನಡಿಗರಿಗೆ ಅವಮಾನ ಮಾಡಿ, ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ಮೆರೆಯುತ್ತಿರುವ ಬಹುಭಾಷಾ ನಟ ಕಮಲ್ ಹಾಸನ್ ಅವರ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ನಾರಾಯಣಗೌಡ, ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಕಮಲ್ ಹಾಸನ್ ಕನ್ನಡಿಗರನ್ನು ಕೆಣಕಿದ್ದಾರೆ. ಕನ್ನಡ ಭಾಷೆಗೆ ಪುರಾತನವಾದ ಇತಿಹಾಸವಿದೆ. ಕಮಲ್ ಹಾಸನ್ ಹೇಳಿಕೆ ಕನ್ನಡಿಗರಿಗೆ ನೊವುಂಟುಮಾಡಿದೆ. ರಾಜ್ಯಾದ್ಯಂತ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ನಟ-ನಟಿಯರು ಕೂಡ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಕಮಲ್ ಹಾಸನ್, ಕನ್ನಡಿಗರ ಕ್ಷಮೆ ಕೇಳಬೇಕು. ತಮ್ಮ ಹೇಳಿಕೆ ಹಿಂಪಡೆಯಬೇಕು. ಈ ಬಗ್ಗೆ ಸಾಕಷ್ಟು ಒತ್ತಾಯ ಕೇಳಿಬಂದರೂ ತಮ್ಮ ತಪ್ಪು ತಿದ್ದಿಕೊಳ್ಳದೇ ನಾನು ಕ್ಷಮೆ ಕೇಳಲ್ಲ ಎಂದು ಮತ್ತೆ ,ಮತ್ತೆ ಉದ್ಧಟತನ ತೋರುತ್ತಿರುವುದು ದುರಹಂಕಾರ. ಅವರ ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.
ಕರ್ನಾಟಕದಲ್ಲಿ ಚಿತ್ರಮಂದಿರಗಳು ಯಾವುದೇ ಕಾರಣಕ್ಕೂ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಬಾರದು, ಒಂದು ವೇಳೆ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇವೆ ಎಂದು ಎಚ್ಚರಿಸಿದ್ದಾರೆ.
ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಅವರ ಯಾವುದೇ ಚಿತ್ರಗಳು ಬಿಡುಗಡೆಯಾಗಲು ಬಿಡುವುದಿಲ್ಲ. ನಮ್ಮ ಮೇಲೆ ಕೇಸ್ ದಾಖಲಾದರೂ ಚಿಂತೆಯಿಲ್ಲ. ಕನ್ನಡದ ಬಗ್ಗೆ ಯಾರೇ ಮಾತನಾಡಿದರೂ, ಅವಹೇಳನ ಮಾಡಿದರೂ ಕರ್ನಾಟಕ ರಕ್ಷಣಾ ವೇದಿಕೆ ಸಹಿಸಲ್ಲ ಎಂದು ಕಿಡಿಕಾರಿದ್ದಾರೆ.