ನವದೆಹಲಿ: ಲಾಕ್ಡೌನ್ ತೆರವು ನಂತರ ಕೈಗಾರಿಕೆಗಳು ಪುನಾರಂಭ ಆಗಲಿದ್ದು ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ರಾಸಾಯನಿಕ ಘಟಕ ದುರಂತ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು, ಕಾರ್ಮಿಕರ ಸುರಕ್ಷತೆಗಾಗಿ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಕೈಗಾರಿಕೆಗಳ ಮರು ಆರಂಭದ ಮೊದಲ ವಾರವನ್ನು ಪರೀಕ್ಷಾರ್ಥ ವಾರ ಎಂದು ಪರಿಗಣಿಸಬೇಕು. ಒಂದೇ ಸಲಕ್ಕೆ ಹೆಚ್ಚಿನ ಗುರಿಸಾಧನೆಗೆ ಪ್ರಯತ್ನ ನಡೆಸಬಾರದು. ಕಾರ್ಖಾನೆಗಳ ಆವರಣದಲ್ಲಿ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಕೆ ಸೇರಿದಂತೆ ಹಲವು ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಸುಮಾರು ಒಂದೂವರೆ ತಿಂಗಳಿನಿಂದ ಕೈಗಾರಿಕಾ ಘಟಕಗಳು ಕಾರ್ಯನಿರ್ವಹಿಸದ ಕಾರಣ ಪುನರಾರಂಭದ ವೇಳೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸುರಕ್ಷತೆ ಕ್ರಮಗಳೊಂದಿಗೆ ಕೈಗಾರಿಕೆ ಮರು ಆರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.