ಬೆಂಗಳೂರು : ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ರಾಜ್ಯಪಾಲರು ಇಂದಿನ ವಿಧಾನ ಮಂಡಲದ ಅಧಿವೇಶ ಭಾಷಣದ ಮುಖ್ಯಾಂಶಗಳು ಹೀಗಿದೆ.
- ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದು ನನ್ನ ಸೌಭಾಗ್ಯವೆಂದು ಭಾವಿಸುತ್ತಾ ತಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.
- ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಹೊಸ ಕನಸು ಹೊತ್ತು ಜನರ ಮುಂದೆ ಹೋಗಿ ಅವರ ಬೆಂಬಲ, ಮನ್ನಣೆ ಮತ್ತು ವಿಶ್ವಾಸ ಪಡೆದು ಅಧಿಕಾರಕ್ಕೆ ಬಂದ ನನ್ನ ಸರ್ಕಾರವು ನಡೆ-ನುಡಿಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಮಾತು ಸ್ಪಟಿಕದ ಸಲಾಕೆಯಂತಿರಬೇಕು. ಕೊಟ್ಟ ಮಾತನ್ನು ಪಾಲಿಸಬೇಕೆನ್ನುವುದು ನಮ್ಮ ವಚನಕಾರರ ನಿಲುವು. ಹಾಗಾದಾಗಲೇ ಮಾತಿಗೆ ಬೆಲೆ. ಹೇಳುವ ಮಾತಿಗೆ ಬೆಲೆ ನೀಡದೆ, ಭರವಸೆಗಳನ್ನೇ ಅವಹೇಳನ ಮಾಡುವ ರಾಜಕೀಯ ವಾತಾವರಣವೆ ಎಲ್ಲೆಡೆ ತುಂಬಿರುವಾಗ ನನ್ನ ಸರ್ಕಾರವು ಹೊಸ ಸಂಸ್ಕೃತಿಗೆ ನಾಂದಿ ಹಾಡಿದೆ. ನನ್ನ ಸರ್ಕಾರ ನುಡಿದಂತೆ ನಡೆದಿದೆ. ಕೊಟ್ಟ ವಚನಗಳನ್ನು ಪಾಲಿಸಿದೆ. ಜನರ ಪ್ರೀತಿ, ವಿಶ್ವಾಸ ಹಾಗೂ ಭರವಸೆಗಳಿಗೆ ಧಕ್ಕೆಯಾಗದಂತೆ ನಡೆದುಕೊಂಡಿದೆ. ಜನರ ಬದುಕಿನಲ್ಲಿ ಹೊಸ ಆಯಾಮ ಸೃಷ್ಟಿಸಿದೆ ಎಂದು ಹೇಳಲು ಹೆಮ್ಮೆ ಎನ್ನಿಸುತ್ತದೆ. ರಾಜ್ಯದ 7 ಕೋಟಿ ಜನರ ಬದುಕಿನಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ. ಸಂತಸದ, ನೆಮ್ಮದಿಯ, ಸಂತೃಪ್ತಿಯ ಹೊಸ ಮನ್ವಂತರಕ್ಕೆ ಚಾಲನೆ ದೊರೆತಿದೆ.
- ದೇಶದಲ್ಲಿ ಆರ್ಥಿಕ ಅಸಮಾನತೆ ಹೆಚ್ಚುತ್ತಿರುವ ಇಂದಿನ ಸಂದರ್ಭದಲ್ಲಿ ಅದನ್ನು ಕಡಿಮೆ ಮಾಡುತ್ತಾ ಆರ್ಥಿಕವಾಗಿ ಮುನ್ನಡೆ ಸಾಧಿಸುವ ಅಭಿವೃದ್ಧಿ ಪಥವನ್ನು ಕರ್ನಾಟಕವು ಅನುಸರಿಸುತ್ತಿದೆ. ಅಭಿವೃದ್ಧಿ ಎಂದರೆ ಕೇವಲ ಆರ್ಥಿಕ ಅಭಿವೃದ್ಧಿ ಮಾತ್ರವಲ್ಲ, ಸುಸ್ಥಿರ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಾಮರಸ್ಯತೆಗಳು ಕೂಡ ಅದರಲ್ಲಿ ಸೇರಿವೆ. ಈ ಆಯಾಮಗಳುಳ್ಳ “ಕರ್ನಾಟಕ ಮಾದರಿ” ಯನ್ನು ನನ್ನ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಈ ಮಾದರಿಯನ್ನು ಇನ್ನಷ್ಟು ಸಶಕ್ತಗೊಳಿಸಿ ಕರ್ನಾಟಕ ರಾಜ್ಯವನ್ನು ಇಡೀ ದೇಶದಲ್ಲೇ ವಿಶಿಷ್ಟವಾಗಿ ರೂಪಿಸುವುದು ನನ್ನ ಸರ್ಕಾರದ ಗುರಿಯಾಗಿದೆ.
- ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದ ಜನರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ. ಈ ಯೋಜನೆಗಳು ಆರ್ಥಿಕವಾಗಿ ಅಶಕ್ತರಾದವರಿಗೆ ಎಷ್ಟೊಂದು ಅಗತ್ಯವಿತ್ತು ಎನ್ನುವುದಕ್ಕೆ ಬೃಹತ್ ಸಂಖ್ಯೆಯಲ್ಲಿ ಹರಿದು ಬಂದ ಅರ್ಜಿಗಳೇ ಸಾಕ್ಷಿ. ಈ ಯೋಜನೆಗಳ ಸಮರ್ಪಕ ಅನುಷ್ಠಾನವನ್ನು ಆದ್ಯತೆಯನ್ನಾಗಿ ಪರಿಗಣಿಸಿರುವ ನನ್ನ ಸರ್ಕಾರ ಇದಕ್ಕೊಂದು ಸುಸಜ್ಜಿತ ವ್ಯವಸ್ಥೆಯನ್ನು ರೂಪಿಸಿದೆ. ಆದರೆ, ಆರ್ಥಿಕ ಅಸಮಾನತೆಯಿಂದಾಗಿ ಅಶಕ್ತರಾಗಿ ಉಳಿದಿರುವ ಜನತೆಯ ಬದುಕಿಗೆ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ.
- ಸಂಪತ್ತು ಕೆಲವೇ ವ್ಯಕ್ತಿಗಳಲ್ಲಿ ಕೇಂದ್ರೀಕೃತವಾಗುವ ರೀತಿಯ ಅಭಿವೃದ್ಧಿಯನ್ನು ಅಭಿವೃದ್ಧಿ ಎಂದು ಕರೆಯಲು ಸಾಧ್ಯವಿಲ್ಲ. ಅದಕ್ಕಾಗಿ ಅಶಕ್ತರಾಗಿ ಉಳಿದಿರುವ ಜನಸಮೂಹವನ್ನು ಇಡೀ ಆರ್ಥಿಕ ಬೆಳವಣಿಗೆಯಲ್ಲಿ ಭಾಗೀದಾರರನ್ನಾಗಿ ಮಾಡುವ ಅವಶ್ಯಕತೆಯಿದೆ. ಅಭಿವೃದ್ಧಿಯ ಫಲವು ಸಹಜವಾಗಿಯೇ ಎಲ್ಲರಿಗೂ ಲಭಿಸುವ ರೀತಿಯಲ್ಲಿ ಆರ್ಥಿಕ ಅಭಿವೃದ್ಧಿಯನ್ನು ನಿರೂಪಿಸಲು ನನ್ನ ಸರ್ಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗಳು ಈ ನಿಟ್ಟಿನಲ್ಲಿ ಒಂದು ಆರಂಭ ಅಷ್ಟೇ.
- ನನ್ನ ಸರ್ಕಾರವು ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವನಿಧಿ ಎಂಬ ಪಂಚ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಲು ಹರ್ಷಿಸುತ್ತೇನೆ.
- ನನ್ನ ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ನನ್ನ ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಏರುವುದು ಜಾಗತಿಕ ದಾಖಲೆಯಾಗಿದೆ.
- ನನ್ನ ಸರ್ಕಾರವು ಖಾತರಿ ಯೋಜನೆಗಳ ಮೂಲಕ ಜನರ ಜೀವನದಲ್ಲಿ ಪರೋಕ್ಷವಾಗಿ ಗಮನಾರ್ಹ ಬದಲಾವಣೆಗಳನ್ನು ಗಮನಿಸುತ್ತಿದೆ. ರಾಜ್ಯದಲ್ಲಿ ಬರಗಾಲವಿದ್ದರೂ ಕಳೆದ ವರ್ಷಕ್ಕಿಂತ ನಮ್ಮ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಕಡಿಮೆಯಾಗಿದೆ. ಯಾವುದೇ ಕಾರಣಕ್ಕೂ ಯಾವುದೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂಬ ನಂಬಿಕೆಯೊಂದಿಗೆ ನನ್ನ ಸರ್ಕಾರ ಕೆಲಸ ಮಾಡುತ್ತಿದೆ.
- ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ (ಫ್ಯೂಚರಿಸ್ಟಿಕ್) ಸರ್ಕಾರ. ನಮ್ಮ ಎಲ್ಲ ಯೋಜನೆಗಳು ಈ ರಾಜ್ಯದ ಸಮಸ್ತ ಜನತೆಯ ಪಾಲಿಗೆ ಸಂತೃಪ್ತಿಯ ಮತ್ತು ನೆಮ್ಮದಿಯ ನಾಳೆಗಳನ್ನು ತರುವ ಉದ್ದೇಶ ಹೊಂದಿವೆ. ನಮ್ಮ ನೀತಿಗಳಲ್ಲಿ ಹೊಸತನವನ್ನು ಅಳವಡಿಸಿಕೊಳ್ಳಲಾಗಿದೆ. ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ, ಕೈಗಾರಿಕೆ ಮತ್ತು ಸೇವಾ ರಂಗಗಳಲ್ಲಿ ಹೊಸ ಭರವಸೆಗಳನ್ನು ಹುಟ್ಟು ಹಾಕಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಹಾಗೂ ಜೀವನ ಭದ್ರತೆಯನ್ನು ಕಲ್ಪಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ನನ್ನ ಸರ್ಕಾರವು ಕೈಗೊಂಡಿದೆ.
- ತಂತ್ರಜ್ಞಾನದ ಹೊಸ ಹೊಸ ಆವಿಷ್ಕಾರಗಳು ಜನಜೀವನದ ಎಲ್ಲಾ ರಂಗಗಳನ್ನು ವ್ಯಾಪಕವಾಗಿ ಆವರಿಸಿಕೊಳ್ಳುತ್ತಿವೆ ಹಾಗೂ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿವೆ. ಈ ಅವಕಾಶಗಳನ್ನು ಬಳಸಿಕೊಂಡು ಉದ್ಯಮಶೀಲತೆಯನ್ನು ರೂಢಿಸಿಕೊಳ್ಳಲು ಮತ್ತು ಉದ್ಯೋಗ ಪಡೆದುಕೊಳ್ಳಲು ನಮ್ಮ ಯುವ ಜನತೆಯನ್ನು ಸನ್ನದ್ಧಗೊಳಿಸುವುದಕ್ಕಾಗಿ ನಾವು ಹೊಸ ಶಿಕ್ಷಣ ನೀತಿಯನ್ನು ರೂಪಿಸುತ್ತಿದ್ದೇವೆ. ಕರ್ನಾಟಕದ ರಾಜ್ಯ ಶಿಕ್ಷಣ ನೀತಿಯು, ಈಗಾಗಲೇ ರಾಜ್ಯವು ಸಾಧಿಸಿರುವ ಶೈಕ್ಷಣಿಕ ಪ್ರಗತಿಯೊಂದಿಗೆ ಈ ಕಾಲದ ಮತ್ತು ಭವಿಷ್ಯದ ಅಗತ್ಯಗಳಿಗೆ ಪೂರಕವಾಗಿರುವ ಶಿಕ್ಷಣ ನೀಡುವ ಹೊಸ ಸಾಧ್ಯತೆಗಳನ್ನು ತೆರೆದಿಡಲಿದೆ. ಶಿಕ್ಷಣ ರಂಗದಲ್ಲಿ ಇರುವ ಕೊರತೆಗಳನ್ನು ಸರಿಪಡಿಸುವುದರ ಜತೆಗೆ ಅದನ್ನು ಕಾಲಮಾನದ ಅಗತ್ಯಗಳಿಗೆ ಅನುಗುಣವಾಗಿ ಪುನರ್ ರಚಿಸುವ ಅನಿವಾರ್ಯತೆಯನ್ನು ಸರ್ಕಾರ ಮನಗಂಡಿದೆ. ರಾಜ್ಯ ಶಿಕ್ಷಣ ನೀತಿಯು ಈ ನಿಟ್ಟಿನಲ್ಲಿ ದೇಶಕ್ಕೆ ಒಂದು ಹೊಸ ಹಾದಿಯನ್ನು ತೋರಲಿದೆ.
- ಜನಕೇಂದ್ರಿತವೂ, ಅಭಿವೃದ್ಧಿಪರವೂ ಆದ ನನ್ನ ಸರ್ಕಾರವು ರಚನೆಯಾಗಿ ಕೇವಲ 8 ತಿಂಗಳಲ್ಲಿಯೇ ಗಮನಾರ್ಹವಾದ ಸಾಧನೆಯನ್ನು ಮಾಡಿದೆ. ರಾಷ್ಟ್ರಕವಿ ಕುವೆಂಪು ಅವರ ಆಶಯವಾದ “ಸರ್ವಜನಾಂಗದ ಶಾಂತಿಯ ತೋಟ” ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಳನ್ನು ನನ್ನ ಸರ್ಕಾರ ಧ್ಯೇಯವಾಕ್ಯಗಳನ್ನಾಗಿಸಿಕೊಂಡಿದೆ. ಈ 8 ತಿಂಗಳ ಆಡಳಿತದಲ್ಲಿ ಈ ಎರಡೂ ಧ್ಯೇಯಗಳನ್ನು ಸಮರ್ಥವಾಗಿ ಅನುಷ್ಠಾನ ಮಾಡಿದೆ ಎಂಬ ಹೆಮ್ಮೆ ನಮ್ಮದು.
- ಈ ಯೋಜನೆಗಳು ಒಂದು ಜಾತಿ, ಒಂದು ಪ್ರದೇಶಕ್ಕೆ, ಒಂದು ಧರ್ಮಕ್ಕೆ ಅನ್ವಯವಾಗದೆ ನಾಡಿನಲ್ಲಿರುವ ಎಲ್ಲಾ ರೀತಿಯ ಅರ್ಹ ಜನರಿಗೆ ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ತಲುಪುತ್ತಿವೆ. ಸಾರ್ವತ್ರಿಕ ಮೂಲ ಆದಾಯ [Universal Basic Income] ಎಂಬುದನ್ನು ನನ್ನ ಸರ್ಕಾರ ಬಾಯಿ ಮಾತಿನಲ್ಲಿ ಹೇಳದೆ ಅಕ್ಷರಶಃ ಅನುಷ್ಠಾನ ಮಾಡುತ್ತಿದೆ. ಇವುಗಳಿಂದ ಜನರಲ್ಲಿ ಒಂದು ಮಟ್ಟದ ನೆಮ್ಮದಿ ನೆಲೆಸಿದೆ.
- ಅತ್ಯಲ್ಪ ಅವಧಿಯಲ್ಲಿಯೆ ಒಂದಿಷ್ಟೂ ಗೊಂದಲ, ಗೋಜಲುಗಳಿಗೆ ಅವಕಾಶ ನೀಡದೆ ನನ್ನ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ಸಾರ್ವತ್ರಿಕ ದಾಖಲೆ ಎಂದೇ ಪರಿಗಣಿಸಲಾಗುತ್ತಿದೆ. ದೇಶ-ವಿದೇಶಗಳ ಮಾಧ್ಯಮಗಳು ಈ ಕುರಿತು ಶ್ಲಾಘನೆ ಮಾಡಿವೆ. ಅಧ್ಯಯನಗಳನ್ನೂ ಮಾಡುತ್ತಿವೆ. ಒಳ್ಳೆಯ ಆಡಳಿತ, ಪಾರದರ್ಶಕ ಹಾಗೂ ಜನಸ್ನೇಹಿ ವ್ಯವಸ್ಥೆಗಳನ್ನು ಮೂಲಮಂತ್ರವನ್ನಾಗಿಸಿಕೊಂಡಿದೆ. ನನ್ನ ಸರ್ಕಾರವು ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಎಂಬುದನ್ನೂ ಮರೆಯದೆ ಈಸ್ ಆಫ್ ಗವರ್ನೆನ್ಸ್ ಎಂಬುದನ್ನು ಮೂಲ ಆಶಯವನ್ನಾಗಿರಿಸಿಕೊಂಡಿದೆ. ಇದು ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲಿಯೇ ಕ್ರಾಂತಿಕಾರಕವಾದ ಹೆಜ್ಜೆಯಾಗಿದೆ.
- ಜೂನ್ 11, 2023 ರಂದು ಮಹತ್ವಾಕಾಂಕ್ಷಿ ಯೋಜನೆಯಾದ “ಶಕ್ತಿ ಯೋಜನೆ”–“ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ”ವನ್ನು ಜಾರಿಗೊಳಿಸಿ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಯಿಟ್ಟಿದೆ. ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿನಿಯರು ಸೇರಿದಂತೆ, ರಾಜ್ಯದಲ್ಲಿರುವ 3.5 ಕೋಟಿ ಮಹಿಳೆಯರು ಜಾತಿ, ಧರ್ಮಗಳ ಬೇಧವಿಲ್ಲದೆ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಶಕ್ತಿ ಯೋಜನೆ ಪ್ರಾರಂಭವಾದಂದಿನಿಂದ ಇಲ್ಲಿಯವರೆಗೆ 150 ಕೋಟಿಗೂ ಹೆಚ್ಚು ಟ್ರಿಪ್ಪುಗಳಲ್ಲಿ ಮಹಿಳಾ ಪ್ರಯಾಣಿಕರು ಈ ಯೋಜನೆಯಡಿ ಪ್ರವಾಸ ಮಾಡಿದ್ದಾರೆ.
- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ “ಅನ್ನಭಾಗ್ಯ ಯೋಜನೆ”ಯಡಿ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5ಕೆ.ಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 5ಕೆ.ಜಿ ಆಹಾರ ಧಾನ್ಯವನ್ನು ಸೇರಿಸಿ ಪ್ರತಿ ಫಲಾನುಭವಿಗೆ 10ಕೆ.ಜಿ ಆಹಾರ ಧಾನ್ಯವನ್ನು ವಿತರಿಸಲು ಬದ್ಧವಾಗಿದೆ. ಪ್ರಸ್ತುತ ಈ ಯೋಜನೆಗೆ ಅಗತ್ಯವಿರುವ ಆಹಾರ ಧಾನ್ಯ ಲಭ್ಯವಾಗುವವರೆಗೆ ರಾಜ್ಯದ ಅರ್ಹ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಹೆಚ್ಚುವರಿ 5ಕೆ.ಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿ.ಗೆ ರೂ.34/-ರಂತೆ ಕುಟುಂಬದ ಸದಸ್ಯರುಗಳ ಬ್ಯಾಂಕ್ ಖಾತೆಗೆ ನೇರ ನಗದಿನ ಮೂಲಕ ವರ್ಗಾಯಿಸಲಾಗುತ್ತಿದೆ. ಜುಲೈ-2023 ಮಾಹೆಯಿಂದ ಜನವರಿ 2024ರ ಅಂತ್ಯಕ್ಕೆ 4595 ಕೋಟಿ ರೂ. ಗಳನ್ನು ಅರ್ಹ ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ.
- ದಿನಾಂಕ:01.07.2023ರಿಂದ ಜಾರಿಗೆ ಬರುವಂತೆ “ಗೃಹಜ್ಯೋತಿ” ಯೋಜನೆಯನ್ನು ಜಾರಿಗೊಳಿಸಿ, ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ 200 ಯೂನಿಟ್ಗಳವರೆಗೆ ಗರಿಷ್ಠ ಬಳಕೆಯ ಮಿತಿಗೆ ಒಳಪಟ್ಟು ಉಚಿತ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ನಾಡಿನ 1.60 ಕೋಟಿ ಗ್ರಾಹಕರು ಈ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ.
- ರಾಜ್ಯದಲ್ಲಿರುವ ಪ್ರತಿ ಅರ್ಹ ಕುಟುಂಬದಲ್ಲಿನ ಯಜಮಾನಿಗೆ ಪ್ರತಿ ತಿಂಗಳು ರೂ.2,000/- ಗಳನ್ನು ನೀಡುವ “ಗೃಹಲಕ್ಷ್ಮಿ“ ಯೋಜನೆಯಡಿ ರೂ.17500 ಕೋಟಿ ಅನುದಾನವನ್ನು ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ನೋಂದಾಯಿಸಿ ಕೊಂಡಿರುವ 1.17 ಕೋಟಿ ಮಹಿಳಾ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಜನವರಿ ವರೆಗೆ 11037 ಕೋಟಿ ರೂ. ಗಳನ್ನು ವರ್ಗಾಯಿಸಲಾಗಿದೆ.
- “ಯುವನಿಧಿ ಯೋಜನೆ”ಯಡಿ 2022-23ನೇ ಸಾಲಿನಲ್ಲಿ ಉತ್ತೀರ್ಣರಾದ ಪದವೀಧರರು ಮತ್ತು ಡಿಪ್ಲೋಮಾ ಹೊಂದಿದವರು 180 ದಿನಗಳು ಪೂರ್ಣಗೊಂಡರೂ ಉದ್ಯೋಗವನ್ನು ಪಡೆಯದೆ ಇದ್ದರೆ ಕ್ರಮವಾಗಿ ಮಾಸಿಕ ರೂ.3000/- ಮತ್ತು ರೂ.1500/- ಗಳ ನಿರುದ್ಯೋಗ ಭತ್ಯೆಯನ್ನು ಎರಡು ವರ್ಷದ ಅವಧಿಗೆ ಅಥವಾ ಎರಡು ವರ್ಷದೊಳಗೆ ಉದ್ಯೋಗ ಪಡೆಯುವವರೆಗೆ ಪಾವತಿಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಈ ಯೋಜನೆಯನ್ನು ಸ್ವಾಮಿ ವಿವೇಕಾನಂದ ಜಯಂತಿಯಂದು ರಾಷ್ಟ್ರೀಯ ಯುವ ದಿನಾಚರಣೆ ಸಂದರ್ಭದಲ್ಲಿ ಅನುಷ್ಠಾನಗೊಳಿಸಲಾಗಿದೆ. ಹೀಗಾಗಿ, ನನ್ನ ಸರ್ಕಾರವು ನೀಡಿದ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಬದ್ಧತೆಯನ್ನು ಮೆರೆದಿದೆ.
- ಗ್ಯಾರಂಟಿ ಯೋಜನೆಗಳಿಂದ ಜನರ ಕೈಸೇರಿದ ಹಣ ಆರ್ಥಿಕತೆಗೆ ಹೊಸ ಉತ್ತೇಜನ ನೀಡಿದೆ. ಒಂದೆಡೆ ರಾಜ್ಯಕ್ಕೆ ದೇಶಿಯ ಮತ್ತು ವಿದೇಶಿಯ ಹೂಡಿಕೆ ದೊಡ್ಡ ರೀತಿಯಲ್ಲಿ ಹರಿದು ಬರುತ್ತಿದೆ. ಈ 8 ತಿಂಗಳಲ್ಲಿ 77 ಸಾವಿರ ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ. ಇನ್ನೊಂದೆಡೆ, ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಕೊಳ್ಳುವ ಶಕ್ತಿಯು ಹೆಚ್ಚಾಗಿ ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿವೆ. ತೆರಿಗೆ ಸಂಗ್ರಹ ಹೆಚ್ಚುತ್ತಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ. ಕಳೆದ 8 ತಿಂಗಳಿನಿಂದ ಈಚೆಗೆ ಅಭಿವೃದ್ಧಿಯ ಹೊಸ ಶಕೆಯೇ ನಮ್ಮಲ್ಲಿ ಆರಂಭವಾಗಿದೆ. ಇದನ್ನು ಇನ್ನಷ್ಟು ಎತ್ತರಕ್ಕೆ ಒಯ್ಯುವುದಕ್ಕಾಗಿ ನನ್ನ ಸರ್ಕಾರ ಕಟಿಬದ್ಧವಾಗಿದೆ. ನನ್ನ ಸರ್ಕಾರ ಪ್ರಾರಂಭಿಸಿರುವ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ಈ ಯೋಜನೆಗಳನ್ನು ಇನ್ನಿತರೆ ಸರ್ಕಾರಗಳು ಅಳವಡಿಸಿಕೊಳ್ಳಲು ಪೈಪೋಟಿಯಿಂದ ಮುಂದಾಗಿವೆ.
- ರಾಜ್ಯದ ಆದಾಯ ಸಂಗ್ರಹಣೆಯಲ್ಲಿ ಸದೃಢವಾದ ಬೆಳವಣಿಗೆಯಾಗಿದೆ. ಜಿಎಸ್ಟಿ ಸಂಗ್ರಹದಲ್ಲಿ ನಾವು ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಆಯವ್ಯಯದಲ್ಲಿ ಖಾತರಿ ಯೋಜನೆಗಳ ಅನುಷ್ಠಾನಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಗಳ ಬಗ್ಗೆ ಆರ್ಥಿಕ ಇಲಾಖೆಯು ಕೈಗೊಂಡ ಅಧ್ಯಯನಗಳು ಜನರಿಂದ ಸಕಾರಾತ್ಮಕ ಪರಿಣಾಮ ಮತ್ತು ಪ್ರತಿಕ್ರಿಯೆಯನ್ನು ತೋರಿಸುತ್ತಿವೆ.
- ನನ್ನ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದರ ಜೊತೆಗೆ ಅಭಿವೃದ್ಧಿ ವಿಚಾರಗಳಲ್ಲೂ ಅಪ್ರತಿಮ ಸಾಧನೆ ಮಾಡಿದೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಬಜೆಟ್ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿಯಾಗಿದೆ.
- ನನ್ನ ಸರ್ಕಾರವು ಇನ್ನಷ್ಟು ಜನೋಪಯೋಗಿಯಾದ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲು ಸಿದ್ಧವಿದೆ. ಆದರೆ ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೆ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕವು ಎರಡನೆ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ ಹತ್ತನೆ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ನಮಗೆ ನ್ಯಾಯ ಮತ್ತು ಧರ್ಮದ ರೀತಿಯಲ್ಲಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ.
- ನೂತನ ಸರ್ಕಾರವು ರಚನೆಯಾದ ತರುವಾಯ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ / ಉಪವಿಭಾಗಾಧಿಕಾರಿ / ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇದ್ದು ಈ ಪೈಕಿ 5ನೇ ಫೆಬ್ರವರಿ 2024ರಂತೆ 84,253 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಹಾಗೂ 57,087 ಪ್ರಕರಣಗಳು ಬಾಕಿ ಉಳಿದಿರುತ್ತವೆ. ಜನಪರ ಆಡಳಿತ ನೀಡುವ ಅಂಗವಾಗಿ ಡಿಜಿಟಲ್ ಪ್ರಮಾಣ ಪತ್ರಗಳನ್ನು ವಿತರಿಸುವ ವ್ಯವಸ್ಥೆಯನ್ನು (Digital Certificates Delivery system) ಅಳವಡಿಸಲಾಗಿದೆ. ಕಂದಾಯ ಇಲಾಖೆಯ ದಾಖಲೆಗಳನ್ನು ಸಂರಕ್ಷಿಸುವ ಸಲುವಾಗಿ ಭೂ ಸುರಕ್ಷಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಪೋಡಿ ಮುಕ್ತ ಗ್ರಾಮ ಯೋಜನೆಗೆ ಮರುಚಾಲನೆ ನೀಡಲಾಗಿದೆ.
- ರಾಜ್ಯದ ಹೆಚ್ಚಿನ ಭಾಗವು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕರ್ನಾಟಕವು 2023ರ ಮುಂಗಾರು ಅವಧಿಯಲ್ಲಿ 240 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಅವುಗಳಲ್ಲಿ196 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಮುಂತಾದ ತಕ್ಷಣದ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರವು 31 ಜಿಲ್ಲೆಗಳಿಗೆ ರೂ.324 ಕೋಟಿ ಬಿಡುಗಡೆ ಮಾಡಿದೆ.
- ಬರ ಪೀಡಿತ ತಾಲೂಕುಗಳಲ್ಲಿ ಬರ ಪರಿಹಾರ ಕ್ರಮಗಳಿಗಾಗಿ ಎನ್ಡಿಆರ್ಎಫ್ನಿಂದ ರೂ.18171.44 ಕೋಟಿ ಆರ್ಥಿಕ ನೆರವು ಕೋರಿ ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಕ್ಕೆ ರಾಜ್ಯ ಸರ್ಕಾರವು ಖಾರಿಫ್ ಬರ ಪರಿಹಾರಕ್ಕೆ ಸಂಬಂಧಿಸಿದ ಜ್ಞಾಪನ ಪತ್ರಗಳನ್ನು ಸಲ್ಲಿಸಿದೆ. ಆದರೆ, ಇದುವರೆಗೂ ಯಾವುದೇ ಹಣ ಬಿಡುಗಡೆಯಾಗಿಲ್ಲ. ಬರ ಪರಿಹಾರವನ್ನು ತುರ್ತಾಗಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.
- ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ SDRF ಮಾರ್ಗಸೂಚಿಗಳ ಪ್ರಕಾರ ನನ್ನ ಸರ್ಕಾರವೆ ಮೊದಲನೇ ಕಂತಾಗಿ ಬೆಳೆ ಹಾನಿ ಪರಿಹಾರವನ್ನು ಅರ್ಹತೆಗೆ ಅನುಗುಣವಾಗಿ ರೂ.2000/-ಗಳವರೆಗೆ ಪರಿಹಾರವನ್ನು 32.50 ಲಕ್ಷ ಬರಪೀಡಿತ ರೈತರುಗಳಿಗೆ 617 ಕೋಟಿ ರೂಗಳಷ್ಟು ಇನ್ಪುಟ್ ಸಬ್ಸಿಡಿಯನ್ನು ಪಾವತಿಸಿದೆ. ಪರಿಹಾರಕ್ಕೆ ಸಂಬಂಧಿಸಿದಂತೆ ನಾವು ಈ ಬಾರಿ ಸಂಪೂರ್ಣ ಪಾರದರ್ಶಕತೆಯನ್ನು ತಂದಿದ್ದೇವೆ. ಹಿಂದಿನ ವರ್ಷಗಳಲ್ಲಿ ನೀಡಿದ ಪರಿಹಾರಗಳಲ್ಲಿ ಮತ್ತು ಇನ್ಪುಟ್ ಸಬ್ಸಿಡಿಗಳಲ್ಲಿ ವ್ಯಾಪಕ ಅವ್ಯವಹಾರ ನಡೆದಿರುವುದು ನನ್ನ ಸರ್ಕಾರದ ಗಮನಕ್ಕೆ ಬಂದಿದೆ. ಅರ್ಹ ರೈತರಿಗೆ ಪರಿಹಾರ ಸಿಗದೆ ಅನರ್ಹರಿಗೆ ಪರಿಹಾರ ನೀಡಿದ ಅನೇಕ ಪ್ರಕರಣಗಳು ಗಮನಕ್ಕೆ ಬಂದಿವೆ. ಇದಷ್ಟೆ ಅಲ್ಲದೆ ತೊಗರಿ ಬೆಳೆಗೆ ಬಂದಿದ್ದ ನೆಟೆ ರೋಗದಿಂದ ಬಾಧಿತರಾದ 274637 ರೈತರ ಬ್ಯಾಂಕ್ ಖಾತೆಗಳಿಗೆ 219.70 ಕೋಟಿ ರೂ. ಗಳನ್ನು ನೇರವಾಗಿ ಪಾವತಿಸಿದ್ದೇವೆ. ಕೊಬ್ಬರಿಗೆ ಕೇಂದ್ರ ಸರ್ಕಾರವು ನಿಗಧಿ ಮಾಡಿರುವ ಬೆಂಬಲ ಬೆಲೆಯ ಜೊತೆಗೆ ನನ್ನ ಸರ್ಕಾರವು ಪ್ರತಿ ಕ್ವಿಂಟಾಲಿಗೆ 1500 ರೂ. ಗಳನ್ನು ನೀಡಲು ಕ್ರಮವಹಿಸಿದೆ. ಬಿತ್ತನೆ ವೈಫಲ್ಯದಿಂದ ಬಾಧಿತರಾದ 8.10 ಲಕ್ಷ ರೈತರಿಗೆ 591.26 ಕೋಟಿ ರೂ. ಗಳ ಬೆಳೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ ಇತ್ಯರ್ಥಪಡಿಸಲಾಗಿದೆ.
- ಬರ ಪರಿಹಾರವಿರಲಿ, ಗ್ಯಾರಂಟಿ ಯೋಜನೆಗಳಿರಲಿ ಇವುಗಳನ್ನು ನನ್ನ ಸರ್ಕಾರವು ಜನರ ಹಕ್ಕುಗಳು ಎಂದು ಭಾವಿಸಿಯೆ ಕಾರ್ಯ ನಿರ್ವಹಿಸುತ್ತಿದೆ. ಪ್ರತಿಯೊಂದನ್ನು ಪರಿಶೀಲಿಸಿ ನೇರವಾಗಿ ರೈತರ ಖಾತೆಗಳಿಗೆ ಪರಿಹಾರ ತಂತ್ರಾಂಶದ ಮೂಲಕ ಜಮಾ ಮಾಡುತ್ತಿದ್ದೇವೆ.
- ತಾಲ್ಲೂಕು ಮಟ್ಟದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ನಿರ್ವಹಣೆಗೆ ಹಾಗೂ ಬರ ಪರಿಹಾರ ಕ್ರಮಗಳ ಮೇಲ್ವಿಚಾರಣೆಗಾಗಿ ಮಾನ್ಯ ಶಾಸಕರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳನ್ನು ರಚಿಸಲಾಗಿದೆ. ಬರಗಾಲಕ್ಕೆ ಸಂಬಂಧಿಸಿದಂತೆ ಜನವರಿ ಅಂತ್ಯದವರೆಗೆ ಶಾಸಕರುಗಳ ಅಧ್ಯಕ್ಷತೆಯಲ್ಲಿ 394 ಟಾಸ್ಕ್ಫೋರ್ಸ್ ಸಭೆಗಳು ನಡೆದಿವೆ. 226 ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಸಭೆಗಳು ನಡೆದಿವೆ. ಈ ಮಾಹಿತಿಗಳೆ ಹೇಳುವಂತೆ ನನ್ನ ಸರ್ಕಾರವು ಜನರ ಸಂಕಷ್ಟ ನಿವಾರಣೆಗೆ ಕಟಿಬದ್ಧವಾಗಿ ನಿಂತಿದೆ.
- ಕರ್ನಾಟಕವು ಪ್ರಾಕೃತಿಕವಾಗಿ ಮತ್ತು ಸಾಂಸ್ಕೃತಿಕವಾಗಿ ʼಒನ್ ಸ್ಟೇಟ್ ಮೆನಿವರ್ಲ್ಡ್ಸ್ʼ ಎಂಬ ಹೆಸರಿನಿಂದ ಪ್ರಖ್ಯಾತವಾಗಿದೆ. ಸುಂದರ ಕರಾವಳಿ, ಮನೋಹರವಾದ ಸಹ್ಯಾದ್ರಿ ಶ್ರೇಣಿ, ಬಯಲು ಸೀಮೆಯ ಐತಿಹಾಸಿಕ ಸ್ಥಳಗಳು, ಹಲವು ನದಿಗಳ ಹರಿವು, ಚಿನ್ನ ಮುಂತಾದ ಅಪಾರ ಪ್ರಮಾಣದ ಖನಿಜ ಸಂಪತ್ತು ಈ ಭವ್ಯ ನಾಡಿನಲ್ಲಿದೆ. ಕೃಷಿ, ಅರಣ್ಯ, ವನ್ಯ ಜೀವಿ ಸಂಪತ್ತನ್ನು ಒಳಗೊಂಡಂತೆ ಅಪಾರ ಮಟ್ಟದ ವೈವಿಧ್ಯತೆ ಇಲ್ಲಿದೆ. ಇವುಗಳಿಂದ ಕಂಗೊಳಿಸುವ ನಾಡು ನಮ್ಮದು. ಈ ನಾಡಿಗೆ ಕರ್ನಾಟಕವೆಂದು ನಾಮಕರಣವಾಗಿ 50 ವಸಂತಗಳು ಸಂದಿವೆ. 1973 ರ ನವೆಂಬರ್ 1 ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಗಿತ್ತು. ಅದರ ನೆನಪಿನಲ್ಲಿ ಈ ವರ್ಷ ಕರ್ನಾಟಕ ಸಂಭ್ರಮ-50 ಅನ್ನು ಆಚರಿಸಲಾಗುತ್ತಿದೆ.
- ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ ನಮ್ಮ ಜೀವನ್ಮರಣದ ಸಂಗತಿಯಾಗಿದೆ. ನಮ್ಮ ಭಾಷೆ ಮತ್ತು ಸಂಸ್ಕೃತಿಯ ಮೇಲೆ ಯಾವುದೇ ಆಕ್ರಮಣವನ್ನು ನಾವು ಸಹಿಸುವುದಿಲ್ಲ. ಯಾವುದೇ ಬೆಲೆ ತೆತ್ತಾದರೂ ಸರಿಯೆ ನಮ್ಮ ಮಾತೃ ಭಾಷೆಯನ್ನು ಹಾಗೂ ಬಸವಣ್ಣ, ಕುವೆಂಪು ಮುಂತಾದವರು ಪ್ರತಿಪಾದಿಸಿದ ಕರ್ನಾಟಕ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನನ್ನ ಸರ್ಕಾರ ಬದ್ಧವಾಗಿದೆ. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022’ ಕಾಯ್ದೆಯನ್ನು ರೂಪಿಸಲಾಗಿದೆ. ಸಧ್ಯದಲ್ಲೆ ಅದು ಅನುಷ್ಠಾನಕ್ಕೆ ಬರಲಿದೆ.