ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ, ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಇಂದು ಮಧ್ಯಾಹ್ನ 12:30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಐತಿಹಾಸಕ್ಕೆ ಸಮಾರಂಭಕ್ಕೆ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿರುವ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ.
ಉಭಯ ನಾಯಕರ ಅಭಿಮಾನಿಗಳು ಈಗಾಗಲೇ ರಾಜಧಾನಿಯತ್ತ ಆಗಮಿಸಿದ್ದು, ಇನ್ನೂ ಕೂಡ ಹಲವು ವಾಹನಗಳು ಬರುತ್ತಿವೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದ್ದು, ತಮ್ಮ ತಮ್ಮ ವಾಹನಗಳ ಮೇಲೆ ಇವರುಗಳಿಗೆ ಶುಭ ಕೋರುವ ಫ್ಲೆಕ್ಸ್ ಹಾಕಿ ಜೈಕಾರ ಕೂಗಿಕೊಂಡು ಬರುತ್ತಿದ್ದಾರೆ. ಹೀಗೆ ಆಗಮಿಸುತ್ತಿರುವವರಿಗೆ ಬೆಂಗಳೂರಿನ ಹೊರ ವಲಯದಲ್ಲಿ ಕಾಫಿ – ತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಸ್ವಲ್ಪ ಕಾಲ ವಿಶ್ರಾಂತಿ ಪಡೆಯಲು ಅನುಕೂಲ ಕಲ್ಪಿಸಿಕೊಡಲಾಗಿದೆ.
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಜೊತೆಗೆ ಇನ್ನೂ ಹಲವು ಶಾಸಕರು ಸಚಿವರುಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನು ಕೆಲ ಹೊತ್ತಿನಲ್ಲೇ ಇದಕ್ಕೆ ಒಂದು ಸ್ಪಷ್ಟತೆ ಸಿಗಲಿದೆ. ಸತತ ಸೋಲುಗಳಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದ ಗೆಲುವು ಟಾನಿಕ್ ಸಿಕ್ಕಂತಾಗಿದ್ದು, ಹೀಗಾಗಿ ಇಂದಿನ ಸಮಾರಂಭವನ್ನು ಐತಿಹಾಸಿಕವಾಗಿಸಲು ಎಲ್ಲ ಸಿದ್ಧತೆ ನಡೆದಿದೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಉನ್ನತ ನಾಯಕರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಆಗಮಿಸುವ ನಿರೀಕ್ಷೆ ಇದೆ.