ಈ ಬಾರಿಯ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಜೆಡಿಎಸ್ ದೊಡ್ಡ ಮಟ್ಟದಲ್ಲಿ ಸೋಲು ಅನುಭವಿಸಿದೆ. ಪಕ್ಷಕ್ಕೆ ಕೇವಲ 19 ಸ್ಥಾನಗಳಷ್ಟೇ ಲಭಿಸಿದ್ದು, ಮತ್ತೊಂದು ಆಘಾತಕಾರಿ ಸಂಗತಿ ಎಂದರೆ ಜೆಡಿಎಸ್ ಪ್ರಾಬಲ್ಯವಿದ್ದ ಕ್ಷೇತ್ರಗಳಲ್ಲೂ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ.
ಈ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡಾ ಪರಾಭವಗೊಂಡಿದ್ದು, ಇದೀಗ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಕಳಪೆ ಸಾಧನೆ ಕುರಿತು ಪಕ್ಷದ ಮುಖಂಡರು ಆತ್ಮಾವಲೋಕನ ನಡೆಸಿದ್ದಾರೆ.
ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ವಿರುದ್ಧ ಜನಾಭಿಪ್ರಾಯವಿದ್ದು, ಒಂದೊಮ್ಮೆ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಸಂದರ್ಭದಲ್ಲಿ ಜೆಡಿಎಸ್, ಬಿಜೆಪಿ ಜೊತೆ ಕೈಜೋಡಿಸಬಹುದು ಎಂಬ ಕಾರಣಕ್ಕೆ ಮತದಾರರು ಕಾಂಗ್ರೆಸ್ ಪರ ವಾಲಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಮುಸ್ಲಿಂ ಮತದಾರರು ಸಹ ಇದೇ ಕಾರಣಕ್ಕೆ ಜೆಡಿಎಸ್ ನಿಂದ ದೂರ ಸರಿದಿರಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.