alex Certify ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಕಾಂಗ್ರೆಸ್ ರಣತಂತ್ರ…! ನವದೆಹಲಿಯಲ್ಲಿ ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಕಾಂಗ್ರೆಸ್ ರಣತಂತ್ರ…! ನವದೆಹಲಿಯಲ್ಲಿ ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ಮೊದಲ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ. ನವದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಟ್ಟಿಗೆ ಅನುಮೋದನೆ ಪಡೆಯಲು ಬಿಜೆಪಿ ವರಿಷ್ಠರ ಮನೆಗಳಿಗೆ ಎಡತಾಕುತ್ತಿದ್ದಾರೆ.

ಇದರ ಮಧ್ಯೆ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಬೆಳವಣಿಗೆ ನಡೆಯುತ್ತಿದ್ದು, ಟಿಕೆಟ್ ಹಂಚಿಕೆಗಾಗಿ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನೇ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಲಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ಕಗ್ಗಂಟು ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗಿ ಪರಿಣಮಿಸುವ ಸಾಧ್ಯತೆ ಇದೆ.

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಟಳ್ಳಿ ನಡುವೆ ಬಿರುಸಿನ ಪೈಪೋಟಿ ನಡೆದಿದ್ದು, ಕುಮಟಳ್ಳಿ ಪರವಾಗಿ ಬ್ಯಾಟಿಂಗ್ ಮಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಒಂದೊಮ್ಮೆ ಟಿಕೆಟ್ ನೀಡದಿದ್ದರೆ ಗೋಕಾಕ್ ಕ್ಷೇತ್ರದಿಂದ ತಾವೂ ಕೂಡ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಹೀಗಾಗಿ ಅಥಣಿ ಕ್ಷೇತ್ರದ ಟಿಕೆಟ್ ಯಾರಿಗೆ ಕೊಟ್ಟರೂ ಅಸಮಾಧಾನ ತಣಿಸಲು ಆಗುವುದಿಲ್ಲ. ಇದರ ಮಧ್ಯೆ ರಮೇಶ್ ಜಾರಕಿಹೊಳಿ ಕೈ ಮೇಲಾದಂತೆ ಕಂಡುಬರುತ್ತಿದ್ದು, ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ.

ಈಗ ಈ ವಿಷಯವನ್ನೇ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್, ಲಕ್ಷ್ಮಣ ಸವದಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅಥಣಿ ಕ್ಷೇತ್ರದ ಟಿಕೆಟ್ ನೀಡಲು ಚಿಂತನೆ ನಡೆಸುತ್ತಿದೆ. ಹೀಗಾಗಿ ಲಕ್ಷ್ಮಣ ಸವದಿ ಅವರ ಜೊತೆ ಕಾಂಗ್ರೆಸ್ ನಾಯಕರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಒಂದೊಮ್ಮೆ ಲಕ್ಷ್ಮಣ ಸವದಿ ಕಾಂಗ್ರೆಸ್ಸಿಗೆ ಬಂದರೆ ರಮೇಶ್ ಜಾರಕಿಹೊಳಿ ಅವರಿಗೆ ಸೆಡ್ಡು ಹೊಡೆದಂತಾಗುತ್ತದೆ ಎಂಬ ನಿಲುವು ಕಾಂಗ್ರೆಸ್ ನಾಯಕರಲ್ಲಿದೆ. ಹೀಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿದ್ದು ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...