ಗುರುವಾರದಂದು ಬೆಂಗಳೂರಿನಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ಕೋಟ್ಯಾಂತರ ರೂಪಾಯಿ ಹಣ ವಶಪಡಿಸಿಕೊಂಡಿದ್ದರು.
ಶುಕ್ರವಾರದಂದು ಸಹ ದಾಳಿ ಮುಂದುವರಿಸಿದ್ದ ಲೋಕಾಯುಕ್ತ ಪೊಲೀಸರು ಒಟ್ಟು 8.28 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದು, ಪ್ರಶಾಂತ್ ಸೇರಿದಂತೆ ಐವರು ಆರೋಪಿಗಳನ್ನು ಲೋಕಾಯುಕ್ತ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಇದರ ಜೊತೆಗೆ ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪನವರ ನಿವಾಸದ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಕೆಲವೊಂದು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಬೆಂಗಳೂರಿನಲ್ಲಿ ಪ್ರಶಾಂತ್ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಯುತ್ತಿದ್ದಂತೆ ಶಾಸಕರ ನಿವಾಸದ ಸಿಸಿ ಟಿವಿ ಬಂದ್ ಮಾಡಲಾಗಿದೆ.
ಹೀಗಾಗಿ ಗುರುವಾರ ಸಂಜೆ ಬಳಿಕದ ಯಾವುದೇ ಮಾಹಿತಿ ಡಿವಿಆರ್ ನಲ್ಲಿ ದಾಖಲಾಗಿಲ್ಲ ಎಂದು ಹೇಳಲಾಗಿದ್ದು, ತಾಂತ್ರಿಕ ಸಿಬ್ಬಂದಿ ಬಂದರೂ ಸಹ ಅದನ್ನು ಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ತಮ್ಮ ನಿವಾಸದ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಬಹುದು ಎಂಬ ಕಾರಣಕ್ಕೆ ಸಿಸಿ ಟಿವಿಯನ್ನು ಬಂದ್ ಮಾಡಿ ಹಣ ಹಾಗೂ ಅಸ್ತಿಪತ್ರಗಳನ್ನು ಬೇರೆ ಕಡೆ ಸ್ಥಳಾಂತರಿಸಿರಬಹುದು ಎಂದು ಹೇಳಲಾಗುತ್ತಿದೆ.