ವಾಟ್ಸಾಪ್ ಗುಂಪಿನಲ್ಲಿ ಪ್ರಚೋದನಕಾರಿ ಸಂದೇಶ ಕಳಿಸಿದ ಆರೋಪದ ಮೇಲೆ ಯಾದಗಿರಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ರೇವಣಸಿದ್ದಪ್ಪ ಜಂಪಾ ವಿರುದ್ಧ ಕೊಡೇಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಏಪ್ರಿಲ್ 6 ರಂದು ಕೊಡೇಕಲ್ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರ ನಡುವೆ ಕಲ್ಲು ತೂರಾಟದ ಘಟನೆ ಸಂಭವಿಸಿತ್ತು. ಯಾದಗಿರಿಯ ಸುರಪುರ ತಾಲೂಕಿನ ನಿವಾಸಿ ರೇವಣ್ಣಸಿದ್ದಪ್ಪ ಜಂಪಾ ಕಲ್ಲು ತೂರಾಟದ ಘಟನೆಯ ಕುರಿತು ಸಂದೇಶವನ್ನು ಪೋಸ್ಟ್ ಮಾಡಿದ್ದರು. ‘ದಿ ಬಾಸ್’ ಎಂಬ ವಾಟ್ಸಾಪ್ ಗುಂಪಿನಲ್ಲಿ ಸಂದೇಶ ಕಳಿಸಲಾಗಿತ್ತು.
ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ದ್ವೇಷವನ್ನು ಪ್ರಚೋದಿಸುವ ಸಂದೇಶವನ್ನು ಹಾಕಲಾಗಿತ್ತೆಂದು ಎಫ್ಐಆರ್ನಲ್ಲಿ ಪೊಲೀಸರು ಹೇಳಿದ್ದಾರೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳಾದ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ (ಸಿಇಒ) ಪತ್ರ ಬರೆದಿದ್ದಾರೆ.
ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟಗೊಳ್ಳಲಿದ್ದು, ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿದೆ.