ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈ ಬಾರಿ ಕಿಂಗ್ಮೇಕರ್ ಅವಕಾಶ ಸಿಗುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಪತ್ರಿಕೆಯೊಂದಿಗೆ ನೀಡಿದ ಸಂದರ್ಶನದಲ್ಲಿ ಮುಂಬರುವ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಪೂರ್ಣ ಬಹುಮತ ಪಡೆದು 140 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.
ಕರಾವಳಿ, ಮಲೆನಾಡು, ಕಿತ್ತೂರು-ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ಗೆ ಬಲ ಬಂದಿದೆ ಎಂದು ಹೇಳಿದರು.
ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸಮೀಕ್ಷೆಗಳನ್ನು ನಡೆಸಿದ್ದು, ಬಿಜೆಪಿ ವಿಶ್ವಾಸ ಕಳೆದುಕೊಂಡಿದೆ. ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ತಿಳಿದಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ನಾಯಕತ್ವದ ವಿಚಾರವಾಗಿ ಮಾತನಾಡಿದ ಶಿವಕುಮಾರ್, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ಮತ್ತು ಶಾಸಕರು ನಿರ್ಧರಿಸುತ್ತಾರೆ ಎಂದ ಅವರು, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷಕ್ಕೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ನಾಯಕತ್ವದ ಕೊರತೆಯಿಂದ ಜನರ ನಂಬಿಕೆಯನ್ನು ಕಳೆದುಕೊಂಡು ಕೋಮು ಧ್ರುವೀಕರಣಕ್ಕೆ ಮುಂದಾಗಿದೆ ಎಂದು ಆರೋಪಿಸಿದರು. ಕೇಂದ್ರ ತನಿಖಾ ಸಂಸ್ಥೆಗಳು ತನಗೆ ಮತ್ತು ಪಕ್ಷದ ಮುಖಂಡರಿಗೆ ಐಟಿ ಮತ್ತು ಇಡಿ ನೋಟಿಸ್ಗಳೊಂದಿಗೆ ನಿರಂತರವಾಗಿ ಕಿರುಕುಳ ನೀಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ಭ್ರಷ್ಟಾಚಾರ ರಹಿತ ಆಡಳಿತ, ಸ್ವಚ್ಛ ಆಡಳಿತ, ಬಡವರಿಗೆ ಉಚಿತ ವಿದ್ಯುತ್, ಬಡವರಿಗೆ ಅಕ್ಕಿ, ನಿರುದ್ಯೋಗಿ ಯುವಕರಿಗೆ ಉತ್ತೇಜನ ಮತ್ತಿತರ ಕ್ರಮಗಳ ಕಾಂಗ್ರೆಸ್ ಪಕ್ಷದ ಭರವಸೆಗಳು ಮತದಾರರ ಬೆಂಬಲವನ್ನು ಗಳಿಸಲಿವೆ ಎಂದು ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಟಿಕೆಟ್ ಹಂಚಿಕೆ ಸಮಸ್ಯೆಗಳು ಮತ್ತು ಸಂಭಾವ್ಯ ಬಂಡಾಯವನ್ನು ಒಪ್ಪಿಕೊಂಡ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಈ ಸಮಸ್ಯೆಗಳನ್ನು ನಿವಾರಿಸುತ್ತದೆ ಎಂಬ ನಂಬಿಕೆ ಇದೆ ಎಂದರು.