alex Certify ಸಿಎಂ ʻಜನತಾ ದರ್ಶನʼದಲ್ಲಿ ʻದೂರುಗಳ ಮಹಾಪೂರ : 3,812 ಅರ್ಜಿ ಸ್ವೀಕಾರ, ಇತ್ಯರ್ಥಕ್ಕೆ 15 ದಿನ ಗಡುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ʻಜನತಾ ದರ್ಶನʼದಲ್ಲಿ ʻದೂರುಗಳ ಮಹಾಪೂರ : 3,812 ಅರ್ಜಿ ಸ್ವೀಕಾರ, ಇತ್ಯರ್ಥಕ್ಕೆ 15 ದಿನ ಗಡುವು

ಬೆಂಗಳೂರು :  ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಜನರಿಂದಲೇ ನೇರವಾಗಿ ಅಹವಾಲು ಸ್ವೀಕರಿಸಿ ಸ್ಪಂದಿಸುವ ‘ಜನಸ್ಪಂದನ’ ಕಾರ್ಯಕ್ರಮವನ್ನು ನಡೆಸಿದ್ದಾರೆ. ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ಜನರಿಂದ ಅಹವಾಲುಗಳನ್ನು ಸ್ವೀಕರಿಸಿ, ಪರಿಹರಿಸುವ ನಿಟ್ಟಿನಲ್ಲಿ ಸ್ಪಂದಿಸಿದ್ದಾರೆ.

ಜನಸ್ಪಂದನಾ ಕಾರ್ಯಕ್ರಮದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜನಸ್ಪಂದನಾ ಕಾರ್ಯಕ್ರಮಕ್ಕೆ ನಮ್ಮ ನಿರೀಕ್ಷೆಗೂ ಮೀರಿ ಜನ ಆಗಮಿಸಿ ತಮ್ಮ ಅಹವಾಲು ಸಲ್ಲಿಸಿದ್ದಾರೆ, ಸುಮಾರು 950 ಜನರಿಂದ ನಾನೇ ನೇರವಾಗಿ ಅಹವಾಲು ಸ್ವೀಕರಿಸಿದ್ದೇನೆ. ಕಾಲ ಮಿತಿಯೊಳಗೆ ಎಲ್ಲರ ಸಮಸ್ಯೆ ಬಗೆಹರಿಸಿ ನಮ್ಮ ಸರ್ಕಾರದ ಮೇಲೆ ಜನರಿಗಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳೀಯ ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಿ, ಜನರು ದೂರದ ಊರುಗಳಿಂದ ಬೆಂಗಳೂರಿಗೆ ಬಂದು ನನ್ನಲ್ಲಿ ಅಹವಾಲು ಸಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗದಂತೆ ತಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.

ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು  ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.

ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಜನಸ್ಪಂದನೆ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರು. ಸುಮಾರು 3500 ಮನವಿಗಳು ಸ್ವೀಕೃತವಾಗಿದೆ. ನಾನು ಬೆಳಿಗ್ಗೆಯಿಂದಲೇ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಖುದ್ದು ಆಲಿಸಿದ್ದೇನೆ. ಸ್ವೀಕೃತವಾಗಿರುವ ಎಲ್ಲ ಅರ್ಜಿಗಳ ಬಗ್ಗೆ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಜನಸ್ಪಂದನಕ್ಕೆ ಉದ್ಯೋಗ ಬೇಡಿಕೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದು, ಸಾಧ್ಯವಾದ ಕಡೆಗಳಲ್ಲಿ ಉದ್ಯೋಗ ಹಾಗೂ ಮಾಸಾಶನ ಒದಗಿಸಲು ಸೂಚನೆ ನೀಡಲಾಗಿದೆ. ಜಿಲ್ಲಾ ಮಂತ್ರಿಗಳು, ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಲಾಗಿದೆ. ಮೂರು ತಿಂಗಳ ನಂತರ ಮತ್ತೊಮ್ಮೆ ಜನಸ್ಪಂದನ ನಡೆಸಲಾಗುವುದು. ಆಗ ಈ ಪ್ರಮಾಣದಲ್ಲಿ ಜನರು ತಮ್ಮ ಸಮಸ್ಯೆಗಳೊಂದಿಗೆ ಬರದಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ನೋಡಿಕೊಳ್ಳಬೇಕು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಆರೋಗ್ಯ ಸಮಸ್ಯೆಯಿಂದಾಗಿ ವೈದ್ಯಕೀಯ ವೆಚ್ಚ ಭರಿಸುವ ಮನವಿಗಳು  ಹೆಚ್ಚು ಸ್ವೀಕೃತವಾಗಿವೆ. ನಾನು ಮುಖ್ಯಮಂತ್ರಿಯಾದ ನಂತರ ಜನರ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸುಮಾರು 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಲಭಿಸುತ್ತದೆ ಎಂಬ ನಂಬಿಕೆಯಿಂದ ಜನರು ಸರ್ಕಾರಿ ಆಸ್ಪತ್ರೆ ಬಿಟ್ಟು, ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುವ ಕಾರಣ, ಅವರ ವೈದ್ಯಕೀಯ ವೆಚ್ಚಗಳೂ ಹೆಚ್ಚಾಗುತ್ತವೆ. ಆ ವೆಚ್ಚದಲ್ಲಿ ಸಣ್ಣಪ್ರಮಾಣವನ್ನು ಸರ್ಕಾರ ಈ ರೀತಿ ಭರಿಸಲು ಪ್ರಯತ್ನಿಸುತ್ತದೆ ಎಂದು ತಿಳಿಸಿದ್ದಾರೆ.

ಮಕ್ಕಳ ಪೌಷ್ಟಿಕಾಂಶ ಸಮಸ್ಯೆಗಳ ಬಗ್ಗೆ ಇಂದು ಅಹವಾಲುಗಳ ಬಂದಿವೆ, ಮಕ್ಕಳ ಪೌಷ್ಠಿಕಾಂಶ ವೃದ್ಧಿಸುವ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ 185 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಅನೀಮಿಯಾ ಇರುವ ಮಕ್ಕಳಿಗೆ ಔಷಧಿ, ಶಾಲಾಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಪ್ರತಿದಿನವು ಹಾಲು, ಬಿಸಿಯೂಟಗಳನ್ನು  ನೀಡಲಾಗುತ್ತಿದೆ.

ಶಕ್ತಿ ಯೋಜನೆ ಅಭೂತಪೂರ್ವ ಯಶಸ್ವಿಯಾದರೂ, ಕೆಲವೆಡೆ ಬಸ್ ಕೊರತೆಯಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ 971 ಬಸ್ಸಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಅಗತ್ಯವಿರುವೆಡೆ ಹೆಚ್ಚು ಬಸ್ ಗಳನ್ನು ಹಾಕಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...