ಬೆಂಗಳೂರು : ರಾಜ್ಯದ 667 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದರು.ಕೊರೊನಾ ಸಂದರ್ಭದಲ್ಲಿ ಪ್ರೌಢಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಮೇಲ್ದರ್ಜೆಗೇರಿಸಲು ಸಾಧ್ಯವಾಗಿರಲಿಲ್ಲ.ಆದಷ್ಟು ಬೇಗ ಸರ್ಕಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಇನ್ನೂ, ವಿಧಾನಸಭೆಯಲ್ಲಿ ಪದವೀಧರ ಶಿಕ್ಷಕರ ನೇಮಕಾತಿ ಆದೇಶ ಪತ್ರ ವಿಳಂಬ ವಿಚಾರ ಚರ್ಚೆಯಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.. ವಿಧಾನಸಭೆ ಕಲಾಪದ ಶೂನ್ಯ ವೇಳೆ ಶಾಸಕ ಬಿ.ವೈ.ವಿಜಯೇಂದ್ರ, ಪದವೀಧರ ಶಿಕ್ಷಕರ ನೇಮಕಾತಿ ಆದೇಶ ಪತ್ರಕ್ಕಾಗಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೆಶ ಪತ್ರ ಸಿಕ್ಕಿಲ್ಲ ಎಂದು ವಿಷಯ ಪ್ರಸ್ತಾಪಿಸಿದರು.
ಈ ವೇಳೆ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕಾನೂನಿನಲ್ಲಿ ಒಂದೇ ಒಂದು ತೊಡಕಿನ ಕಾರಣಕ್ಕಾಗಿ ಆದೇಶ ಪತ್ರ ವಿಳಂಬವಾಗಿದೆ. ಪತಿಯ ಆದಾಯ ಯಾರು ತೆಗೆದುಕೊಳ್ಳಬೇಕು ಎಂಬ ವಿಚಾರವಾಗಿ ಸಮಸ್ಯೆಯಾಗಿದೆ. ಸಧ್ಯ ಈ ವಿಚಾರ ಕೋರ್ಟ್ ನಲ್ಲಿದೆ. ಯಾವುದಕ್ಕೂ ಆದೇಶ ಕೊಡಬೇಡಿ, ಪ್ರಕ್ರಿಯೆ ನಿಲ್ಲಿಸಬೇಡಿ ಎಂದು ನ್ಯಾಯಾಲಯ ಹೇಳಿದೆ. ಕೋರ್ಟ್ ಆದೇಶ ಕೊಟ್ಟರೆ ತಕ್ಷಣ ಆದೇಶ ಪತ್ರ ನೀಡಲು ಇಲಾಖೆ ಸಿದ್ಧವಿದೆ. ಕೋರ್ಟ್ ಆದೇಶ ಪಡೆದು ಜುಲೈ 17ರೊಳಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು