alex Certify ಮೂರು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲು : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂರು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲು : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು : ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ 3 ರಾಜ್ಯಗಳಲ್ಲಿ ಸೋಲು ಕಂಡಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ.ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ.

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು.

ಬಿಜೆಪಿ ಬಿಆರ್ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು ಕೂಡಾ ನಮ್ಮ ಗೆಲುವಿಗೆ ಕಾರಣ.

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು ಮುಂದುವರಿಸಿದೆ.
ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ.

ರಾಜಸ್ಥಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ.ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು ಮುಂದುವರಿಸಿದ್ದಾರೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...