ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ವಿವಿಧೆಡೆ 2-3 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ವಿವಿಧ ಭಾಗಗಳಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಕ್ಯಾಲೆಂಡರ್ ಪ್ರಕಾರ ಮಾರ್ಚ್ ನಿಂದ ಮೇ ವರೆಗೆ ಮುಂಗಾರು ಪೂರ್ವ ಅವಧಿಯಾಗಿದೆ. ಈ ಅವಧಿಯಲ್ಲಿ ಬಿಸಿಲ ತಾಪಕ್ಕೆ ಮಳೆಯಾಗಲಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ. ಮಂಡ್ಯ, ಮೈಸೂರು, ಕೊಡಗು ಹಾಸನ,ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 14ರ ವರೆಗೆ ಮೂರು ದಿನ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಾರ್ಚ್ 11 ರಿಂದ 14ರವರೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನ ಕೆಲವು ಕಡೆಗಳಲ್ಲಿ ಮಂಗಳವಾರ ಸಂಜೆ ತುಂತುರು ಮಳೆಯಾಗಿದ್ದು, ಇದು ವರ್ಷದ ಮೊದಲ ಮಳೆಯಾಗಿದೆ. ಬುಧವಾರ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಶಾಂತಿನಗರ, ಎಂಜಿ ರಸ್ತೆ, ಬನಶಂಕರಿ, ಬಸವನಪುರ ಸೇರಿ ಕೆಲವು ಕಡೆ ಮಂಗಳವಾರ ಸಂಜೆ ದಿಢೀರ್ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನಕ್ಕೆ ತಂಪಿನ ಅನುಭವವಾಗಿದೆ.