ಉಡುಪಿ : ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಾಗೂ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಕಾರಣ ಸೆಪ್ಟೆಂಬರ್ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿರುವ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಪರ್ಯಾಯ ಮಾರ್ಗವಾಗಿ ವಾಹನಗಳು ಈ ಕೆಳಗಿನ ಬದಲಿ ಮಾರ್ಗವನ್ನು ಆಯ್ದುಕೊಳ್ಳಬಹುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದ್ದು, ಭಾರಿ ವಾಹನ ಸಂಚಾರ ನಿರ್ಬಂಧ ನಿಷೇಧಿಸಲಾಗಿದೆ. ವಾಹನ ಸವಾರರು ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಘಾಟ್- ಕಾರ್ಕಳ- ಉಡುಪಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ಹಾಗೂ ತೀರ್ಥಹಳ್ಳಿ- ಮಾಸ್ತಿಕಟ್ಟೆ- ಸಿದ್ದಾಪುರ- ಕುಂದಾಪುರ- ಉಡುಪಿ ಮಾರ್ಗದಲ್ಲಿ ಕೂಡ ಸಂಚರಿಸಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.