ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜೊತೆಗೆ ಹೊಸ ವರ್ಷಾಚರಣೆಗೆ ಕೆಲ ಕಟ್ಟುಪಾಡುಗಳನ್ನು ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಆರೋಗ್ಯ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲಾ ಥಿಯೇಟರ್ ಗಳು, ಮಾಲ್ ಗಳು, ಶಾಲಾ-ಕಾಲೇಜುಗಳಲ್ಲಿ, ಒಳಾಂಗಣ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದರು.
ರಾಜ್ಯದ ಎಲ್ಲಾ ಪಬ್, ಬಾರ್ ರೆಸ್ಟೋರೆಂಟ್ ಗಳಲ್ಲಿ ಸಿಬ್ಬಂದಿಗಳಿಗೆ ಮಾಸ್ಕ್ ಹಾಗೂ 2 ಡೋಸ್ ಲಸಿಕೆ ಕಡ್ಡಾಯ. ಮೂರನೇ ಡೋಸ್ ಲಸಿಕೆ ಪಡೆಯಲು ಸೂಚಿಸಲಾಗುವುದು. ಹೊಸ ವರ್ಷಾಚರಣೆ ಸಂಭ್ರಮಕ್ಕೆ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಮಾಸ್ಕ್ ಕಡ್ಡಾಯ, ರಾತ್ರಿ 1 ಗಂಟೆಯವರೆಗೆ ಮಾತ್ರ ನ್ಯೂ ಇಯರ್ ಆಚರಣೆಗೆ ಅವಕಾಶ ನೀಡಲಾಗುವುದು. 1 ಗಂಟೆ ಬಳಿಕ ಯಾವುದೇ ಪಾರ್ಟಿ, ಕಾರ್ಯಕ್ರಮಗಳಿಗೆ ಅವಕಾಶ ನೀಡದಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.