ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ಈ ನಡುವೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಹಾಗೂ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಲವು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಹಾಲಿ ಶಾಸಕರು, ಸಚಿವರಿಗೆ ಕೊಕ್ ನೀಡಲಾಗಿದೆ. ಹೀಗಾಗಿ ಹಲವು ಮಂದಿ ತಮ್ಮ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಇದೀಗ ಟಿಕೆಟ್ ಸಿಗದ್ದಕ್ಕೆ ಬೇಸರಗೊಂಡಿರುವ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿನ ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಕೋರಿಕೆಯನ್ನು ಅಂಗೀಕರಿಸಬೇಕಾಗಿ ವಿನಂತಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಇನ್ನು ಟಿಕೆಟ್ ಸಿಗದಿದ್ದಕ್ಕೆ ನೋವು ಹೊರಹಾಕಿರುವ ಎಂ.ಪಿ. ಕುಮಾರಸ್ವಾಮಿ, ಇನ್ನು ಮುಂದೆಯೂ ನಿಮ್ಮೊಂದಿಗೆ ಜೊತೆಯಲ್ಲಿರುತ್ತೇನೆ. ಜನಪರ, ರೈತ ಪರ, ಎಲ್ಲಾ ಜಾತಿ, ಧರ್ಮದವರನ್ನು ಸಮಾನವಾಗಿ ಕಂಡು ಕೆಲಸ ಮಾಡಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.