
ಬೆಂಗಳೂರು: ರಾಗಿ ಅಥವಾ ಭತ್ತದ ತಳಿಗೆ ರಾಜ್ಯದ ಹಿರಿಯ ಮುತ್ಸದ್ದಿ, ರೈತ ಹೋರಾಟಗಾರರಾದ ದಿ. ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸಿ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಸೂಚನೆ ನೀಡಿದ್ದಾರೆ.
ಡಾ. ಜಿ. ಮಾದೇಗೌಡ ಪ್ರತಿಷ್ಠಾನದ 23ನೇ ವರ್ಷದ ರಾಜ್ಯ ಮಟ್ಟದ ಜಿ. ಮಾದೇಗೌಡ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರು ಈ ವಿಷಯದ ಬಗ್ಗೆ ಕೃಷಿ ಸಚಿವರ ಗಮನ ಸೆಳೆದಿದ್ದರು. “ಜಿ. ಮಾದೇಗೌಡರು ಕಳೆದ 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ನಾಮಕರಣ ಮಾಡಬೇಕು. ಈ ಮೂಲಕ ಅವರಿಗೆ ಗೌರವವನ್ನು ಸಮರ್ಪಣೆ ಮಾಡಬೇಕು” ಎಂದು ಮನವಿ ಮಾಡಿದ್ದರು.
ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ಈ ಸಂಬಂಧ ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.