ಹಾಸನ: ಮುಂಬರುವ ವಿಧಾನಸಭಾ ಚುನಾವಣೆಗೆ ಹಾಸನದಿಂದ ಸ್ಪರ್ಧಿಸಲು ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಇಚ್ಛಿಸಿದ್ದು, ತನಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇದೇ ವಿಚಾರವಾಗಿ ನಿನ್ನೆ ಬಹಿರಂಗವಾಗಿ ಹೇಳಿಕೆ ನೀಡಿದ್ದ ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ನನಗೆ ಜೆಡಿಎಸ್ ಟಿಕೆಟ್ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಇದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿರಾಕರಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಹಾಸನದಿಂದ ಸ್ಪರ್ಧಿಸಲು ಬೇರೆ ಸಮರ್ಥ ಅಭ್ಯರ್ಥಿಗಳು ನಮ್ಮಲ್ಲಿ ಇದ್ದಾರೆ. ಇಲ್ಲಿ ಕುಟುಂಬ ರಾಜಕಾರಣದ ಪ್ರಶ್ನೆಯಲ್ಲ ಎಂದರು.
ನಮ್ಮ ಕುಟುಂಬದಲ್ಲಿ ಯಾವುದೇ ಸಂಘರ್ಷವಿಲ್ಲ. ಪಕ್ಷದ ಲಕ್ಷಾಂತರ ಜನರಿಗೆ ತಲೆ ಕೊಡುವ ಜವಾಬ್ದಾರಿ ನನ್ನದು. ಚನ್ನಪಟ್ಟಣ ಕ್ಷೆತ್ರದಲ್ಲಿ 20 ವರ್ಷಗಳಿಂದ ಗೆಲ್ಲಲೂ ಆಗಿರಲಿಲ್ಲ. ಆದರೆ ಮಧುಗಿರಿಯಲ್ಲಿ ಅನಿತಾ ಕುಮಾರಸ್ವಾಮಿಗೆ ಬೇಡ ಅಂದಿದ್ದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಇಲ್ಲ ಎಂದು ಒತ್ತಡ ಹಾಕಿದ್ದರು. ಅನಿವಾರ್ಯ ಕಾರಣಕ್ಕೆ ಬಿಟ್ಟು ಕೊಟ್ಟಿದ್ದಾರೆ ಎಂದರು.
ಹಾಸನದಲ್ಲಿ ಸಮರ್ಥ ಅಭ್ಯರ್ಥಿ ಇದ್ದಾರೆ. ಯಾರೂ ಅಭ್ಯರ್ಥಿಗಳೇ ಇಲ್ಲ. ಅನಿವಾರ್ಯತೆ ಇದೆ ಎಂದಿದ್ದರೆ ನಾನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದ್ದೆ. ಇಲ್ಲಿ ಕುಟುಂಬ ರಾಜಕಾರಣದ ಪ್ರಶ್ನೆ ಅಂತ ಅಲ್ಲ. ಸಮರ್ಥ ಅಭ್ಯರ್ಥಿಗಳಿದ್ದಾರೆ ಎಂದು ಹೇಳುವ ಮೂಲಕ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಇಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.