
ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಬಿಟ್ ಕಾಯಿನ್ ಹಗರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿ ಇತರರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಆಗಸ್ಟ್ 22 ಕ್ಕೆ ಮುಂದೂಡಿದೆ.
ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು ಎಫ್ ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಆಗ ಅಡ್ವೋಕೇಟ್ ಜನರಲ್ ಬಿಟ್ ಕಾಯಿನ್ ಹಗರಣವನ್ನು ಎಸ್ ಐಟಿಗೆ ವಹಿಸಲಾಗಿದೆ. ಈ ಬಗ್ಗೆ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.