alex Certify BIGG NEWS : ಕಲ್ಯಾಣ ಕರ್ನಾಟಕದ ಜನತೆಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ : ಶೀಘ್ರವೇ 26,000 ಹುದ್ದೆಗಳ ಭರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಕಲ್ಯಾಣ ಕರ್ನಾಟಕದ ಜನತೆಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ : ಶೀಘ್ರವೇ 26,000 ಹುದ್ದೆಗಳ ಭರ್ತಿ

ಕಲಬುರಗಿ : ಕಲ್ಯಾಣ ಕರ್ನಾಟಕದ ಜನತೆಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 26 ಸಾವಿರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಲಬುರಗಿ ನಗರದ ಡಿ.ಎ.ಅರ್.ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಅಮಗವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದಲ್ಲಿ ಖಾಲಿಯಿರುವ 26000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಶಿಕ್ಷಕರು, ವೈದ್ಯರು, ಸುಮಾರು 40 ಸಾವಿರ ಜನರಿದ್ದಾರೆ. ನಮ್ಮ ಅವಧಿಯಲ್ಲಿಯೇ 70 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ವಿವರಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಅರೋಗ್ಯ ಕೇಂದ್ರಗಳ ನಿರ್ಮಾಣದ ಮಾದರಿಯನ್ಜು ಇಂಡಿಯನ್ ಪಬ್ಲಿಕ್ ಹೆಲ್ತ್  ಸ್ಟ್ಯಾಂಡರ್ಡ್ ಅನ್ವಯ ನಿಗದಿಪಡಿಸಲು ಕೆ.ಕೆ.ಆರ್.ಡಿ.ಬಿ. ಮಂಡಳಿ ಮತ್ತು ಅರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಇದರಿಂದ ಭಾಗದಲ್ಲಿ ಆರೋಗ್ಯ ಸೇವೆ ಮತ್ತಷ್ಟು ಉತ್ತಮಗೊಳ್ಳುವ ವಿಶ್ವಾಸ ಹೊಂದಿರುವೆ ಎಂದರು.

ಕಲಬುರಗಿಯಲ್ಲಿ ನೈಸ್ ಅಕಾಡೆಮಿ (Nagavi Institute for Competitive Examination)  ಸೆಂಟರ್ ಫಾರ್ ಎಕ್ಸಿಲೆನ್ಸ್ ಫಾರ್ ಕ್ಯಾರಿಯರ್ ಡೆವಲೆಪಮೆಂಟ್ ಸಂಸ್ಥೆ ಮುಂದಿನ ಆರ್ಥಿಕ ವರ್ಷದಿಂದ ಆರಂಭವಾಗಲಿದೆ. ಕೆ.ಕೆ.ಆರ್.ಡಿ.ಬಿ ಮಂಡಳಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸಂಸ್ಥೆಗೆ ಪ್ರತಿ ವರ್ಷ 10 ಕೋಟಿ ರೂ. ನೀಡುವ ಮೂಲಕ ಪ್ರತಿ ವರ್ಷ ಸುಮಾರು 2,000 ಅಭ್ಯರ್ಥಿಗಳಿಗೆ ಐ.ಎ.ಎಸ್, ಕೆ.ಎ.ಎಸ್., ಬ್ಯಾಂಕಿಂಗ್ ಹಾಗು ರಾಜ್ಯ ಸರ್ಕಾರದ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲ್ಲಿ ತರಬೇತಿ ನೀಡಲಾಗುತ್ತಿದೆ. ಇದರಿಂದ ರಾಜ್ಯ, ರಾಷ್ಟ್ರ ದಲ್ಲಿ ಪ್ರಮುಖ ಹುದ್ದೆಯಲ್ಲಿ ಈ ಭಾಗದ ಜನರು ಉದ್ಯೋಗ ಪಡೆಯಲು ಸಹಾಯವಾಗಲಿದೆ ಎಂದರು.

ಪ್ರದೇಶಕ್ಕೆ ಘೋಷಿಸಿರುವ 5,000  ಕೋಟಿ ರೂ. ಅನುದಾನ ಸಮರ್ಪಕ ಬಳಕೆಗೆ ಡಾ.ಅಜಯ್ ಸಿಂಗ್ ನೇತೃತ್ವದಲ್ಲಿ ಪೂರ್ಣ ಪ್ರಮಾಣದಲ್ಲಿ ಮಂಡಳಿ ರಚಿಸಲಾಗಿದೆ.  ಡಾ. ಅಜಯ್ ಸಿಂಗ್ ಅವರು ಈಗಾಗಲೆ ಪ್ರಥಮ ಮಂಡಳಿ ಸಭೆ ನಡೆಸಿ ಪ್ರಸಕ್ತ ಸಾಲಿಗೆ 3,000 ಕೋಟಿ ರೂ. ಮೊತ್ತಕ್ಕೆ ಕ್ರಿಯಾ ಯೋಜನೆ ರೂಪಿಸುತ್ತಿದ್ದಾರೆ. ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಶೇ.25ರಷ್ಟು ಅನುದಾನ ಶಿಕ್ಷಣಕ್ಕೆ ಮೀಸಲಿಟ್ಟಿದ್ದು ಈ ಭಾಗದಲ್ಲಿ ಅಕ್ಷರ ಕ್ರಾಂತಿಗೆ ನಾಂದಿ ಹಾಡಲಿದೆ ಎಂದರು.

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಕೆ.ಕೆ.ಆರ್.ಡಿ.ಬಿ. ಮಂಡಳಿಯು “ಅಕ್ಷರ ಆವಿಷ್ಕಾರ” ಯೋಜನೆ ರೂಪಿಸಿದೆ. ಇದರ ಭಾಗವಾಗಿ ಪ್ರದೇಶದಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲೆ-2,566 ಮತ್ತು ಪ್ರೌಢ ಶಾಲೆ-52 ಸೇರಿದಂತೆ ಒಟ್ಟು 2,618 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೆ ಮಂಜೂರಾತಿ ನೀಡಿ 18.34 ಕೋಟಿ ರೂ. ಅನುದಾನ ನೀಡಿದೆ. ಇದು ಈ ಸರ್ಕಾರಕ್ಕೆ ಪ್ರದೇಶದಲ್ಲಿನ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ನೀಡುತ್ತಿರುವ ಆದ್ಯತೆಗೆ ಸಾಕ್ಷಿಯಾಗಿದೆ ಎಂದರು.

ಪ್ರಸಕ್ತ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವರುಣನ ಅವಕೃಪೆಯಿಂದ ಮಳೆ ಇಲ್ಲದೆ ರಾಜ್ಯದಲ್ಲಿ ಬರ ಪರಿಸ್ಥಿತಿ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 42 ಸೇರಿದಂತೆ ರಾಜ್ಯದ 31 ಜಿಲ್ಲೆಗಳ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಕುಡಿಯುವ ನೀರು, ಮೇವು ಲಭ್ಯತೆಯನ್ನು ಖಾತರಿ ಪಡಿಸಿಕೊಳ್ಳುವಂತೆ ಹಾಗೂ ಬೆಳೆ ಹಾನಿ ಸಮೀಕ್ಷೆ ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಿ.ಎಂ. ಸಿದ್ದರಾಮಯ್ಯ ತಿಳಿಸಿದರು.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಹೈದ್ರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ಈ ಪ್ರದೇಶಕ್ಕೆ ಸ್ವಾತಂತ್ರ್ಯದ ಬೆಳಕು ಬಂದಿದ್ದು ಒಂದು ವರ್ಷದ ನಂತರ. ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ಅಪ್ಪಾರಾವ್ ಪಾಟೀಲ್, ಚಂದ್ರಶೇಖರ್ ಪಾಟೀಲ್ ಹೀಗೆ ಅಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ  ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ 1948ರ ಸೆ.17 ರಂದು ಹೈದರಾಬಾದ್ ಕರ್ನಾಟಕ ಪ್ರದೇಶ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು. ಇದಕ್ಕಾಗಿ ಹೋರಾಡಿದ ಎಲ್ಲ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಬ್ರಿಟೀಷ್ ಮತ್ತು ನಿಜಾಮರ ಆಳ್ವಿಕೆಯ ಕಾರಣ ಪ್ರದೇಶದಲ್ಲಿ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಕಾಣಲಿಲ್ಲ. ಪ್ರಾದೇಶಿಕ ಅಸಮಾನತೆ ನಿವಾರಣೆ ನಿಟ್ಟಿನಲ್ಲಿ ಎನ್.ಧರ್ಮಸಿಂಗ್ ಅವರ ವರದಿಯಂತೆ ಕಲಬುರಗಿ, ಬೀದರ, ರಾಯಚೂರು, ಬಳ್ಳಾರಿ ಒಳಗೊಂಡ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಲಾಗಿತ್ತಾದರು, ಅದು ಜನರ ನಿರೀಕ್ಷೆ ಈಡೇರಿಸಲು ಸಫಲವಾಗಲಿಲ್ಲ. ಇದು ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನದ 371ನೇ ಪರಿಚ್ಛೇದಕ್ಕೆ ತಿದ್ದುಪಡಿಗೆ ಹೋರಾಟಕ್ಕೆ ನಾಂದಿಯಾಯಿತು.  ಹಲವು ದಶಕಗಳ ತೀವ್ರ ಹೋರಾಟ ಹಾಗೂ ಈ ಭಾಗದ ಹಿರಿಯ ರಾಜಕಾರಣಿಗಳಾದ ಮಾಜಿ ಕೇಂದ್ರ ಸಚಿವರಾಗಿದ್ದ ಡಾ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿ.ಎನ್. ಧರಂಸಿಂಗ್ ಅವರ ಅವಿರತ ಪ್ರಯತ್ನದಿಂದಾಗಿ 2013ರಲ್ಲಿ ಮನಮೋಹನ ಸಿಂಗ್ ನೇತೃತ್ವದ ಯು.ಪಿ.ಎ. ಸರ್ಕಾರ ಕಲಂ 371ಕ್ಕೆ ತಿದ್ದುಪಡಿಗೆ ಅಸ್ತು ಎಂದ ಪರಿಣಾಮ ಈ ಭಾಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಲಭಿಸಿದೆ. ಸಾವಿರಾರು ಕೋಟಿ ರೂ. ವಿಶೇಷ ಅನುದಾನ ಹರಿದು ಬರುತ್ತಿದೆ. ಇದರಿಂದ ಹಿಂದುಳಿದ ಈ ಭಾಗದ ಜನರ ಬದುಕಿನಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾಗಿದೆ ಎಂದರು.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಧರ್ಮ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ ಈ ಪ್ರದೇಶ ವಿಶ್ವವೇ ನಿಬ್ಬೆರಗಾಗುವಂತಹ ಜಗಜ್ಯೋತಿ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮಾದರಿ ಆಡಳಿತಕ್ಕೆ ಭದ್ರ ಬುನಾದಿ ಹಾಕಿದ ಪವಿತ್ರ ಭೂಮಿಯಾಗಿದೆ ಎಂದು ಪ್ರದೇಶದ ಕಲೆ, ಸಂಸ್ಕತಿಯನ್ನು ಸಿ.ಎಂ. ಕೊಂಡಾಡಿದರು.

ಗ್ರಾಮ ಪಂಚಾಯಿತಿಯ ಗ್ರಂಥಾಲಯಗಳು ಶ್ರೀಸಾಮಾನ್ಯರ ವಿಶ್ವದ್ಯಾಲಯಗಳಾಗಬೇಕು ಎಂಬ ಪರಿಕಲ್ಪನೆಯಿಂದ ಗ್ರಾಮದ ಗ್ರಂಥಾಲಯಗಳನ್ನು “ಅರಿವು ಕೇಂದ್ರ’ ಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ 939 ಅರಿವು ಕೇಂದ್ರಗಳನ್ನು ಮೇಲ್ದರ್ಜೇಗೇರಿಸಲಾಗಿದೆ. ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳ ನಿರ್ಮಾಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 100 ಕೋಟಿ ರೂ. ಅನುದಾನ ಒದಗಿಸಿದೆ. ತಲಾ 25 ಲಕ್ಷ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗುತ್ತಿದ್ದು, ಇದೂವರೆಗೆ 7 ಜಿಲ್ಲೆಗಳಲ್ಲಿ 218 ಗ್ರಾಮಗಳಲ್ಲಿ ಸಮುದಾಯ ಶೌಚಾಲಯ ಸಂಕೀರ್ಣ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದೆ.

ಕೆ.ಕೆ.ಆರ್.ಡಿ.ಬಿ. ಮಂಡಳಿಯ 182.65 ಕೋಟಿ ರೂ. ಆರ್ಥಿಕ ನೆರವಿನೊಂದಿಗೆ ಕಲಬುರಗಿಯಲ್ಲಿ ನಿರ್ಮಾಣವಾಗುತ್ತಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯನ್ನು ಮುಂದಿನ 3-4 ತಿಂಗಳಿನಲ್ಲಿ ಉದ್ಘಾಟಿಸಲಾಗುವುದು. ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ 70 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಹೊಸ “ತಾಯಿ ಮತ್ತು ಮಕ್ಕಳ ಆಸ್ಪತ್ರೆ” ನಿರ್ಮಾಣ ಮಾಡಲಾಗುತ್ತಿದೆ. ಇದಲ್ಲದೆ ಸುಟ್ಟ ಗಾಯಗಳ ಘಟಕ ಸ್ಥಾಪನೆ ಮಾಡಲಾಗುವುದು. ಕಲಬುರಗಿ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ 162.80 ಕೋಟಿ ರೂ. ಮತ್ತು ಕೊಪ್ಪಳ ವೈದ್ಯಕೀಯ ಕಾಲೇಜು ಆವರಣದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ 29.76 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದ ಅವರು, ಕೆ.ಕೆ.ಆರ್.ಟಿ.ಸಿ.ಗೆ 100 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ 250 ಬಸ್ ಖರೀದಿ ಮಾಡಲಾಗುತ್ತಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...