ಬೆಂಗಳೂರು: ಅರ್ಚಕರನ್ನು ಮದುವೆಯಾಗುವ ವಧುವಿಗೆ ಮೂರು ಲಕ್ಷ ರೂಪಾಯಿ ಮೊತ್ತದ ಬಾಂಡ್ ನೀಡಲಾಗುತ್ತದೆ. ವಧುವಿನ ಹೆಸರಲ್ಲೇ ಮೈತ್ರಿ ಬಾಂಡ್ ವಿತರಿಸಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಅರ್ಚಕರು, ಪುರೋಹಿತರು ಮದುವೆಯಾಗುವವರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮೈತ್ರಿ ಯೋಜನೆಯಡಿ 3 ಲಕ್ಷ ರೂ. ಬಾಂಡ್ ನೀಡಲಾಗುತ್ತದೆ. ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಹೆಚ್. ಸಚ್ಚಿದಾನಂದ ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ ಅರ್ಚಕರು ಮತ್ತು ಪೌರೋಹಿತ್ಯ ಮಾಡುವವರನ್ನು ಮದುವೆಯಾಗಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ವಧುವನ್ನು ಪ್ರೋತ್ಸಾಹಿಸಲು ಯೋಜನೆ ರೂಪಿಸಲಾಗಿದೆ. ಮೂರು ವರ್ಷಗಳ ನಂತರ ಫಲಾನುಭವಿಗಳು ಬಾಂಡ್ ಹಣ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.
ಮಂಡಳಿಯ ವತಿಯಿಂದ ಬಡ ಹೆಣ್ಣುಮಕ್ಕಳ ಮದುವೆಗೆ 25 ಸಾವಿರ ರೂಪಾಯಿ ನೆರವು ನೀಡಲಾಗುವುದು. 5 ಎಕರೆಗಿಂತ ಕಡಿಮೆ ಜಮೀನು ಹೊಂದಿದವರಿಗೆ ಬೋರ್ ವೆಲ್, ಟ್ರ್ಯಾಕ್ಟರ್ ಖರೀದಿಗೆ ಧನಸಹಾಯ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಯೋಜನೆಯಡಿ ನಗದು ಬಹುಮಾನ ನೀಡಲಾಗುತ್ತದೆ. ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.