ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಐಎಎಸ್ ಅಧಿಕಾರಿ, ಬಿಜೆಪಿ ನಾಯಕ ಕೆ. ಶಿವರಾಂ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಶಿವರಾಂ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬಿ.ಎಸ್ ಯಡಿಯೂರಪ್ಪ ಸಂತಾಪ
ಹೆಸರಾಂತ ಕಲಾವಿದ, ಪಕ್ಷದ ಮುಖಂಡ, ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಯಶಸ್ವಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ಹೃದಯಾಘಾತದಿಂದ ನಿಧನರಾದ ಸುದ್ದಿ ಅತೀವ ಆಘಾತ ತಂದಿದೆ. ಅವರು ಅಸ್ವಸ್ಥರಾದ ವಿಷಯ ತಿಳಿದು ಇಂದು ಬೆಳಗ್ಗೆ ಆಸ್ಪತ್ರೆಗೆ ತೆರಳಿ ಅವರನ್ನು ನೋಡಿ, ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದೆ. ಆದರೆ ವಿಧಿ ಅವರನ್ನು ಬೇಗ ಕರೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬದವರಲ್ಲಿ ಹಾಗು ಅಭಿಮಾನಿಗಳಲ್ಲಿ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
https://twitter.com/BSYBJP/status/1763121436003332180
ಡಿಸಿಎಂ ಡಿಕೆಶಿ ಸಂತಾಪ
ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಪರೀಕ್ಷೆ ಬರೆದು ಭಾರತೀಯ ಆಡಳಿತ ಸೇವೆಯಲ್ಲಿ ಸೇವೆ ಸಲ್ಲಿಸಿದ್ದ ಶ್ರೀ ಕೆ.ಶಿವರಾಮ್ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ನಟರಾಗಿಯೂ ಹಲವು ಚಿತ್ರಗಳಲ್ಲಿ ನಟಿಸಿ, ಕನ್ನಡ ಚಿತ್ರರಂಗಕ್ಕೆ ಅವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿಕೆಶಿ ಸಂತಾಪ ಸೂಚಿಸಿದ್ದಾರೆ.
https://twitter.com/DKShivakumar/status/1763126143451017282