ಬೆಂಗಳೂರು: ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ SC, ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಉಚಿತ ಲ್ಯಾಪ್ ಟಾಪ್ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಯೋಜನೆಗಳಡಿ ಉಚಿತ ಲ್ಯಾಪ್ ಟಾಪ್ ಗಳನ್ನು ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಕೂಡ ಮಾಹಿತಿ ನೀಡಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದು ಟ್ವೀಟ್ ನಲ್ಲಿ ಮಾಹಿತಿ ನೀಡಿದರು.
ವಿ.ವಿ ಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿಯು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, . ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು ಎಂದು ವಿವಿಯ ಕುಲಪತಿಗಳ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ ನೀಡಿದರು.ಸಭೆ ಬಳಿಕ ಡಿಸಿಎಂ ಡಿಕೆಶಿ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಕುರಿತಂತೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಕರ್ನಾಟಕದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ, ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಕರ್ನಾಟಕದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ, ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಿದ್ದೇವೆ, ರಾಜ್ಯ ಸರ್ಕಾರ ಹೊಸ ಶಿಕ್ಷಣ ಪಾಲಿಸಿ ತರಲು ಸಮಿತಿ ರಚನೆ ಮಾಡಲಿದೆ. ರಾಜ್ಯದಲ್ಲಿ ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಾಗುತ್ತದೆ, ಹೊಸ ‘ರಾಷ್ಟ್ರೀಯ ಶಿಕ್ಷಣ ನೀತಿ’ ಮುಂದುವರೆಸಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.