ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಆದೇಶ ಹೊರಡಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ” ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07-01-2004ರ ಹಾಗೂ ತಿದ್ದುಪಡಿ ದಿನಾಂಕ:01-02-2024ರ “(ಇ) ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಕನ್ನಡ ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.