ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಇದ್ದ ಹಲವು ನಿಬಂಧನೆಗಳನ್ನು ಕೈ ಬಿಟ್ಟು ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ರೂಪಿಸಲು ಸರ್ಕಾರ ಮುಂದಾಗಿದ್ದು, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು9ಶಿಕ್ಷಕರ ವರ್ಗಾವಣೆ ನಿಯಂತ್ರಣ0 ಕಾಯ್ದೆ ತಿದ್ದುಪಡಿತರಲಾಗುವುದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ಪರಸ್ಪರ ವರ್ಗಾವಣೆಗೆ ಒಂದು ಬಾರಿ ಇದ್ದ ಅವಕಾಶವನ್ನು ಕೈ ಬಿಡಲಿದ್ದು, ಇನ್ನು ಮುಂದೆ ಆ ನಿರ್ಬಂಧ ಇರುವುದಿಲ್ಲ. ಕೆಲಸಕ್ಕೆ ಸೇರಿದ ಮೊದಲ ಐದು ವರ್ಷ ಹಾಗೂ ನಿವೃತ್ತಿಗೆ ಮೊದಲಿನ ಐದು ವರ್ಷ ಮಾತ್ರ ಅವಕಾಶ ಇರುವುದಿಲ್ಲ. ಒಮ್ಮೆ ವರ್ಗಾವಣೆಯಾದ ನಂತರ ಮತ್ತೆ ಮೂರು ವರ್ಷ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಕಲ್ಯಾಣ ಕರ್ನಾಟಕದ ಜಿಲ್ಲೆಗಳು, ಮಲೆನಾಡು ವಲಯ, ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳೆಂದು ಗುರುತಿಸಲಾದ ತಾಲೂಕುಗಳಿಗೆ ಹೋಗ ಬಯಸುವ ಶಿಕ್ಷಕರಿಗೆ ವಿಶೇಷ ಆದ್ಯತೆ ನೀಡಲಾಗುವುದು.
ಸಾರ್ವತ್ರಿಕ ವರ್ಗಾವಣೆ ಒಟ್ಟು ವೃಂದಬಲದ ಶೇಕಡ 11ರಷ್ಟು ಮಿತಿ ಇರುತ್ತದೆ. ವಿಶೇಷ ಆದ್ಯತೆಯಡಿ ವರ್ಗಾವಣೆ ಬಯಸುವ ಶಿಕ್ಷಕರಿಗೆ ಈ ನಿಯಮ ಅನ್ವಯವಾಗುವುದಿಲ್ಲ. ಯಾವುದೇ ಘಟಕ ಹಾಗೂ ವೃಂದದಲ್ಲಿ ಕನಿಷ್ಠ 10 ವರ್ಷ ಅಥವಾ ಎಲ್ಲಾ ವೃಂದಗಳು ಸೇರಿ 15 ವರ್ಷ ಕೆಲಸ ಮಾಡಿದ ಶಿಕ್ಷಕರನ್ನು ಶೇಕಡ 25 ರಷ್ಟು ಮಿತಿಯ ಒಳಗೆ ಖಾಲಿ ಹುದ್ದೆಗಳಿರುವ ತಾಲೂಕುಗಳಿಗೆ ವರ್ಗಾವಣೆ ಮಾಡಲು ಅವಕಾಶವಿರುತ್ತದೆ ಎಂದು ಹೇಳಲಾಗಿದೆ.