
ಬುಧವಾರದಂದು ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದು, ಇಡೀ ಜಗತ್ತು ಬೆರಗಿನ ಕಣ್ಣಿನಿಂದ ಭಾರತದತ್ತ ನೋಡುತ್ತಿದೆ. ರಷ್ಯಾ, ಅಮೇರಿಕಾ, ಚೀನಾ ಬಳಿಕ ಚಂದ್ರನ ಅಂಗಳದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿ ಲ್ಯಾಂಡ್ ಮಾಡಿದ್ದು, ಅದರಲ್ಲೂ ಚಂದಿರನ ದಕ್ಷಿಣ ಧ್ರುವಕ್ಕೆ ಕಾಲಿಟ್ಟ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ನಮ್ಮ ವಿಜ್ಞಾನಿಗಳ ಈ ಸಾಧನೆಗೆ ಭಾರತದ ಜನತೆ ಸಂಭ್ರಮಿಸುತ್ತಿದ್ದು, ವಿಶ್ವದಾದ್ಯಂತ ನೆಲೆಸಿರುವ ಅನಿವಾಸಿ ಭಾರತೀಯರೂ ಇದರಲ್ಲಿ ಭಾಗಿಯಾಗಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ಸೂರ್ಯನ ಅಧ್ಯಯನಕ್ಕೂ ಇಸ್ರೋ ವಿಜ್ಞಾನಿಗಳು ಸಿದ್ಧತೆ ನಡೆಸಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಇದರಲ್ಲೂ ಯಶಸ್ಸು ಖಚಿತ ಎಂದು ಹೇಳಲಾಗಿದೆ.
ಇಸ್ರೋ ವಿಜ್ಞಾನಿಗಳ ಚಂದ್ರಯಾನ -3 ಯಶಸ್ಸಿನ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಹರ್ಷ ವ್ಯಕ್ತಪಡಿಸಿದ್ದು ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿರುವ ಅವರು ಅಲ್ಲಿಂದಲೇ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ. ಅಲ್ಲದೆ ಆಗಸ್ಟ್ 26ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ಇಸ್ರೋ ವಿಜ್ಞಾನಿಗಳನ್ನು ಖುದ್ದು ಭೇಟಿಯಾಗಿ ಅಭಿನಂದಿಸಲಿದ್ದಾರೆ ಎಂದು ತಿಳಿದು ಬಂದಿದೆ.