
ರಾಮನಗರ: ಚನ್ನಪಟ್ಟಣ ಉಪಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಅಖಾಡ ರಂಗೇರಿದೆ. ಡಿ.ಕೆ ಸಹೋದರರು ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವೆ ಪ್ರತಿಷ್ಠೆಯ ಪೈಪೋಟಿ ಆರಂಭವಾಗಿದೆ.
ಈ ನಡುವೆ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿರುವ ಕುಮಾರಸ್ವಾಮಿ ಉಪಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಒತ್ತಾಯಗಳು ಕೇಳಿಬಂದಿವೆ. ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಜೊತೆ ಕುಮಾರಸ್ವಾಮಿ ಸಭೆ ನಡೆಸಿದ್ದು, ಸಭೆಯಲ್ಲಿ ನಿಖಿಲ್ ಸರ್ಧೆ ಬಗ್ಗೆ ಕೂಗು ಕೇಳಿಬಂದಿದೆ.
ನಿಖಿಲ್ ಸ್ಪರ್ಧೆ ಬಗ್ಗೆ ಒತ್ತಡಗಳು ಹೆಚ್ಚಿದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ ಹಾಗು ನಿಖಿಲ್, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿದ್ದಾರೆ. ಚೆನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಅವರನ್ನು ಎನ್ ಡಿಎ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆದರೆ ಸಿ.ಪಿ.ಯೋಗೇಶ್ವರ್ ಕೂಡ ಚನ್ನಪಟ್ಟಣ ಕ್ಷೇತ್ರದ ಆಕಾಂಕ್ಷಿಯಾಗಿದ್ದು, ಈ ನಿಟ್ಟಿನಲ್ಲಿ ಯೋಗೇಶ್ವರ್ ಮನವೊಲಿಕೆ ನಿಟ್ಟಿನಲ್ಲಿಯೂ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.
ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋದರೆ ಮಾತ್ರ ಕಾಂಗ್ರೆಸ್ ಸೋಲಿಸಬಹುದು. ಇಲ್ಲವಾದಲ್ಲಿ ಮತವಿಭಜನೆಯಾಗುವ ಸಾಧ್ಯತೆ ಇರುವುದರಿಂದ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿಯನ್ನಾಗಿ ಯಾರನ್ನು ಕಣಕ್ಕಿಳಿಸಬೇಕು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ತೊಡಗಿದೆ. ಈ ನಿಟ್ಟಿನಲ್ಲಿ ಹೆಚ್.ಡಿ.ಕೆ.ನಡೆ ಕುತೂಹಲ ಮೂಡಿಸಿದೆ.