ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳಿ ಸಂಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅಮರಾನಾಥ ಮಂದಿರದಿಂದ 6 ಕಿಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಅಮರನಾಥ ಯಾತ್ರೆಯಲ್ಲಿ ಕರ್ನಾಟಕದ 300 ಜನರು ಸಂಕಷ್ಟಕ್ಕೆ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರೆದಿದ್ದು ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ ಎಂದು ಸಚಿವ ಎಚ್. ಕೆ ಪಾಟೀಲ್ ತಿಳಿಸಿದರು. ಎಲ್ಲ ಕನ್ನಡಿಗರ ರಕ್ಷಣೆಗೆ ಸೂಕ್ತವಾದ ಕ್ರಮ ಕೈಗೊಳ್ಳಲಾಗಿದೆ. ಯಾತ್ರಾರ್ಥಿಗಳಿಗೆ ಯಾವುದೇ ರೀತಿಯ ತೊಂದರಯಾಗದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಅವರನ್ನು ನೇಮಕ ಮಾಡಿದೆ.
ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಸಂಪರ್ಕಕ್ಕೆ ಸಿಕ್ಕ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಸಂತ್ರಸ್ತರ ರಕ್ಷಣೆ ಹಾಗೂ ರಾಜ್ಯಕ್ಕೆ ಕರೆ ತರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿತವಾಗಿದೆ. ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದು ಯಾತ್ರೆಗಳು ಸುರಕ್ಷಿತವಾಗಿದ್ದಾರೆ. ಸದ್ಯ 6 ಯಾತ್ರಾರ್ಥಿಗಳನ್ನು ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಲಾಗಿದೆ.