ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಭಾನುವಾರ ನಡೆಯಬೇಕಿದ್ದ ಎಫ್ಡಿಎ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಇನ್ನು ಸಿಸಿಬಿ ಪೊಲೀಸರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 14 ಆರೋಪಿಗಳನ್ನು ಬಂಧಿಸಿದ್ದು, 35 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ವಾಣಿಜ್ಯ ತೆರಿಗೆ ಇನ್ಸ್ಪೆಕ್ಟರ್, ಕೆಪಿಎಸ್ಸಿ ನೌಕರ ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ.
ಪ್ರಕರಣದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿ ಅಭ್ಯರ್ಥಿಯಿಂದ 10 ಲಕ್ಷ ರೂಪಾಯಿ ಪಡೆದು ಪ್ರಶ್ನೆಪತ್ರಿಕೆ ನೀಡಲು ಆರೋಪಿಗಳು ತಯಾರಿ ಮಾಡಿಕೊಂಡಿದ್ದರು ಎನ್ನಲಾಗಿದೆ.