alex Certify BIG NEWS: 3 ಜಿಲ್ಲೆಗಳಲ್ಲಿ ವೀಕೆಂಡ್, ರಾಜ್ಯಾದ್ಯಂತ ನೈಟ್ ಕರ್ಫ್ಯೂ; ಮದುವೆ, ಸಮಾರಂಭಕ್ಕೆ ಅವಕಾಶ –ಶಾಲೆ, ಗಣೇಶೋತ್ಸವಕ್ಕೂ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3 ಜಿಲ್ಲೆಗಳಲ್ಲಿ ವೀಕೆಂಡ್, ರಾಜ್ಯಾದ್ಯಂತ ನೈಟ್ ಕರ್ಫ್ಯೂ; ಮದುವೆ, ಸಮಾರಂಭಕ್ಕೆ ಅವಕಾಶ –ಶಾಲೆ, ಗಣೇಶೋತ್ಸವಕ್ಕೂ ಅನುಮತಿ

ಬೆಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗಿನ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಮೂರು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಇರಲಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯ ನಂತರ ಕಂದಾಯ ಸಚಿವ ಆರ್. ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ್ದಾರೆ.

400 ಜನರಿಗೆ ಅವಕಾಶ:

ಕಲ್ಯಾಣ ಮಂಟಪಗಳಲ್ಲಿ ಸಭೆ-ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಸಣ್ಣ ಪುಟ್ಟ ಛತ್ರಗಳಲ್ಲಿ ಶೇಕಡ 50 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ದೊಡ್ಡ ಛತ್ರಗಳಲ್ಲಿ 400 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.

ಮದುವೆ ಸಮಾರಂಭಗಳಿಗೆ ಅವಕಾಶ ನೀಡುವಂತೆ ಕಲ್ಯಾಣ ಮಂದಿರ ಮಾಲೀಕರು ಸಿಎಂ ಭೇಟಿಯಾಗಿ ಮನವಿ ಮಾಡಿದ ಹಿನ್ನೆಲೆಯಲ್ಲಿ 400 ಜನರ ಮಿತಿಯೊಳಗೆ ಮದುವೆ ಮಾಡಲು ಅವಕಾಶ ನೀಡಿದ್ದು, ಸಣ್ಣ ಸಮುದಾಯ ಭವನಗಳಲ್ಲಿ ಕಡಿಮೆ ಜನರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

1 ವಾರ ಕ್ವಾರಂಟೈನ್:

ಕೇರಳದಲ್ಲಿ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಕೇರಳದಿಂದ ಬರುವವರಿಗೆ ಒಂದು ವಾರ ಕ್ವಾರಂಟೈನ್ ನಲ್ಲಿ ಇರಿಸಲಾಗುವುದು. ಒಂದು ವಾರದ ನಂತರ ಕೋವಿಡ್ ಟೆಸ್ಟ್ ಮಾಡಲಾಗುವುದು. ಕೇರಳದಿಂದ ಬಹಳಷ್ಟು ಜನ ಮಂಗಳೂರು, ಕೊಡಗು ಜಿಲ್ಲೆಗೆ ಆಗಮಿಸುವುದರಿಂದ ಹೆಚ್ಚಿನ ನಿಗಾ ವಹಿಸಲಾಗುವುದು.

ನಿರ್ಬಂಧ ಸಡಿಲ:

ಕೊರೋನಾ ಪಾಸಿಟಿವಿಟಿ ದರ ಕಡಿಮೆಯಾಗಿರುವ ಜಿಲ್ಲೆಗಳಲ್ಲಿ ನಿಬಂಧನೆಗಳನ್ನು ಸಡಿಲಗೊಳಿಸುವುದು ಎಂದು ಸಚಿವ ಅಶೋಕ್ ತಿಳಿಸಿದ್ದಾರೆ. ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿಸಿದ್ದ ನಿರ್ಬಂಧವನ್ನು ಸಡಿಲಿಕೆ ಮಾಡಲಾಗುವುದು.

6 ರಿಂದ 8 ನೇ ಕ್ಲಾಸ್ ಆರಂಭ:

ರಾಜ್ಯದಲ್ಲಿ 6, 7, 8 ನೇ ತರಗತಿ ಆರಂಭಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಶೇಕಡ 50 ರಷ್ಟು ಮಕ್ಕಳು ದಿನಬಿಟ್ಟು ದಿನ ಶಾಲೆಗೆ ಹಾಜರಾಗಬೇಕು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ವಾರದಲ್ಲಿ 5 ದಿನ ತೆರೆಯಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಉಳಿದ ಎರಡು ದಿನ ಶಾಲೆಯನ್ನು ಸ್ವಚ್ಛಗೊಳಿಸಲು ಅವಕಾಶ ನೀಡಲಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಶಾಲೆ ದಿನವೂ ನಡೆಯಲಿದ್ದು, ಮಕ್ಕಳು ದಿನ ಬಿಟ್ಟು ದಿನ ಶಾಲೆಗೆ ಬರಬೇಕಿದೆ. 6, 7 ಮತ್ತು 8 ನೇ ತರಗತಿಗಳನ್ನು ಸೋಂಕು ಕಡಿಮೆ ಇರುವ ತಾಲೂಕುಗಳಲ್ಲಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್ 6 ರಿಂದ ಶಾಲೆಗಳು ಆರಂಭವಾಗಲಿವೆ.

ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ:

ಕೊರೋನಾ ನಡುವೆ ಈ ಬಾರಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ. 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಗುವುದು. ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆಗೆ ನಿಷೇಧ ಹೇರದೇ ಅವಕಾಶ ನೀಡಬೇಕೆಂಬ ಅಭಿಪ್ರಾಯಕ್ಕೆ ಕೇಳಿ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೆ. 5 ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಕೊರೋನಾ ಪರಿಸ್ಥಿತಿ ಆಧರಿಸಿ ಮಾರ್ಗಸೂಚಿ ಅನುಸರಿಸಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ಸೆ. 5 ರ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಶೋಕ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...