ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ 5 ಸಾವಿರ ರೂ. ಜೊತೆಗೆ 2 ಸಾವಿರ ರೂ. ಸೇರಿಸಿ ಒಟ್ಟು 7 ಸಾವಿರ ರೂ. ನೀಡಲಾಗುವುದು. ಉಳಿದಂತೆ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹ ಧನವನ್ನು ಪಾರದರ್ಶಕವಾಗಿ ನೀಡಲಾಗುವುದು. ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು ಆಶಾ ವರ್ಕರ್ಸ್ಗೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.