ಚಿಕ್ಕಮಗಳೂರು : ಭಾರಿ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಕೆಲವು ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 7) ರಜೆ ಘೋಷಣೆ ಮಾಡಲಾಗಿದೆ.
ಭಾರಿ ಮಳೆ ಹಿನ್ನೆಲೆ ಜಾಗರ, , ಆವತಿ, ವಸ್ತಾರೆ, ಖಾಂಡ್ಯ, ಆಲ್ದೂರು ಹೋಬಳಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.
ಮಳೆಯಲ್ಲಿ ಮಕ್ಕಳು ಶಾಲೆಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಮಕ್ಕಳ ಸುರಕ್ಷತೆ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಜೆ ನೀಡಲಾಗಿದೆ. ಚಿಕ್ಕಮಗಳೂರಿನಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಕೊಪ್ಪ, ಶೃಂಗೇರಿ, ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಕಡೆ ನದಿ ಹಳ್ಳಗಳು ತುಂಬಿ ತುಳುಕುತ್ತಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 8 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC) ತಿಳಿಸಿದೆ.
ಮುಂಗಾರು ಅಬ್ಬರ ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಜು. 8ರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.