
ಬೆಂಗಳೂರು: ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಲಾಕ್ ಡೌನ್ ಮೊದಲ ದಿನ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ ಹೈಕೋರ್ಟ್ ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಸರ್ಕಾರಕ್ಕೆ ಸೂಚನೆ ನೀಡಿದೆ.
ಕೋವಿಡ್ ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ ಈ ಕುರಿತು ಸೂಚನೆ ನೀಡಿದೆ. ಅರ್ಜಿದಾರರ ಪರ ವಕೀಲರು, ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯ ಬಲಪ್ರಯೋಗ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕವರನ್ನು ಲಾಠಿಯಿಂದ ಹೊಡೆಯುತ್ತಿದ್ದಾರೆ ಎಂದು ದೂರಿದ್ದಾರೆ.
ಕಳೆದ ವರ್ಷ ಮಾರ್ಚ್ 30 ರಂದು ಅನಗತ್ಯವಾಗಿ ಬಲಪ್ರಯೋಗ ಮಾಡದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ ಅಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿದ್ದು, ಎಜಿ ಪ್ರಭುಲಿಂಗ ನಾವದಗಿ ಬಲಪ್ರಯೋಗ ಮಾಡುತ್ತಿಲ್ಲ. ಜಾಗೃತಿ ಮೂಡಿಸಲಾಗುತ್ತಿದೆ. ಪೊಲೀಸ್ ಮಹಾನಿರ್ದೇಶಕರೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲು ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಹೈಕೋರ್ಟ್ ಜನ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸರ್ಕಾರಕ್ಕೆ ಅಗತ್ಯ ಸಹಕಾರ ಕೊಡಬೇಕು. ಅನಗತ್ಯವಾಗಿ ಬಲಪ್ರಯೋಗ ಮಾಡದಂತೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ತಿಳಿಸಿದ್ದು ವಿಚಾರಣೆಯನ್ನು ಮೇ 13ಕ್ಕೆ ಮುಂದೂಡಿದೆ.