ಕರ್ನಾಟಕ, ಐಟಿ ಸೇರಿದಂತೆ ಎಲ್ಲ ವಲಯಗಳಲ್ಲೂ ಮುಂಚೂಣಿಯಲ್ಲಿದ್ದು, ಹೀಗಾಗಿ ಪ್ರಸ್ತುತ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಜೊತೆಗೆ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪಿಸುವ ಅನಿವಾರ್ಯತೆ ಇದೆ.
ಈ ನಿಟ್ಟಿನಲ್ಲಿ ಮುಂದಾಗಿರುವ ರಾಜ್ಯ ಸರ್ಕಾರ, ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ. ಪಾಟೀಲ್ ಉತ್ತರಿಸಿ ಮಹತ್ವದ ಮಾಹಿತಿ ನೀಡಿದ್ದಾರೆ.
ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವ ಕಾರ್ಯವನ್ನು ಐಡೆಕ್ ಸಂಸ್ಥೆಗೆ ವಹಿಸಲಾಗಿರುತ್ತದೆ.
ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಗುಡ್ಡಗಾಡು ಪ್ರದೇಶ, ಸಂಪರ್ಕ-ರಸ್ತೆ, ರೈಲು ಮತ್ತು ಮೆಟ್ರೋ ಸಂಪರ್ಕ, ಬಳಕೆದಾರರಿಗೆ ಉದ್ದೇಶಿತ ವಿಮಾನ ನಿಲ್ದಾಣವನ್ನು ತಲುಪುವ ದೂರ ಮತ್ತು ಸಮಯ, ವಿಸ್ತಾರವಾದ ಭೂಪ್ರದೇಶ, ಜಮೀನಿನ ಪ್ರಕಾರಗಳು, ಕಡಿಮೆ ಜನಸಾಂದ್ರತೆಯ ಪ್ರದೇಶ ಮತ್ತು ಜಲಸಂಪನ್ಮೂಲದ ಲಭ್ಯತೆ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸಂಭಾವ್ಯ ಸ್ಥಳಗಳ ಅಧ್ಯಯನವನ್ನು ನಡೆಸಲಾಗುತ್ತಿದೆ.
ಅದರಂತೆ, ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿ / ಪ್ರಸ್ತಾವನೆಯನ್ನು ಸಿದ್ಧಪಡಿಸುವ ಕಾರ್ಯ ಪರಿಶೀಲನೆಯಲ್ಲಿರುತ್ತದೆ.
*