ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ನಾಟಕೀಯ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಶಿವಸೇನೆಯ ಉದ್ಧವ್ ಠಾಕ್ರೆ ಅಧಿಕಾರ ಕಳೆದುಕೊಳ್ಳುವ ಆತಂಕದಿಂದ ಕೊನೆಗೂ ಪಾರಾಗಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ಯಾವುದೇ ಸದನದ ಸದಸ್ಯರಲ್ಲದ ಉದ್ಧವ್ ಠಾಕ್ರೆ ಮೇ 27ರ ಒಳಗೆ ಸದನದ ಸದಸ್ಯರಾಗಿ ಆಯ್ಕೆಯಾಗಬೇಕಿದ್ದು, ಆದರೆ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಏಪ್ರಿಲ್ 3ರಂದು ನಡೆಯಬೇಕಿದ್ದ ವಿಧಾನ ಪರಿಷತ್ ಚುನಾವಣೆಯನ್ನು ಚುನಾವಣಾ ಆಯೋಗ ಅನಿರ್ದಿಷ್ಟಾವಧಿವರೆಗೆ ಮುಂದೂಡಿತ್ತು.
ಇದರಿಂದಾಗಿ ಮಹಾರಾಷ್ಟ್ರದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಂಭವವಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಅಧಿಕಾರ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇದೀಗ ಕೇಂದ್ರ ಚುನಾವಣಾ ಆಯೋಗ ಮೇ 21ರಂದು ಮಹಾರಾಷ್ಟ್ರ ವಿಧಾನಸಭೆಯಿಂದ ವಿಧಾನಪರಿಷತ್ತಿನ 9 ಸ್ಥಾನಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಇದರಿಂದಾಗಿ ಉದ್ಧವ್ ಠಾಕ್ರೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಲು ಹಾದಿ ಸುಗಮವಾದಂತಾಗಿದೆ.