ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಆದರೂ ನಿಯಂತ್ರಣಕ್ಕೆ ಬರುತ್ತಿಲ್ಲ, ಬದಲಾಗಿ ಸೋಂಕು ಪೀಡಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಲೇ ಇದೆ.
ಹೀಗಾಗಿ ಇದು ವ್ಯಾಪಕವಾಗಿ ಹರಡದಂತೆ ತಡೆಯುವ ಸಲುವಾಗಿ ಹಲವಾರು ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸಾಮಾಜಿಕ ಅಂತರ ಪಾಲಿಸಬೇಕೆಂದು ತಿಳಿಸಲಾಗಿದೆ.
ಅಲ್ಲದೆ ಮದುವೆ ಸಂದರ್ಭದಲ್ಲಿ ಕೇವಲ 50 ಜನ ಮಾತ್ರ ಭಾಗವಹಿಸಲು ಅವಕಾಶವಿದೆ ಆದರೆ ಮಧ್ಯಪ್ರದೇಶದ ಆಲಿರಾಜಪುರದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಮೂಲಕ ನಿಯಮ ಉಲ್ಲಂಘಿಸಿರುವ ಘಟನೆ ನಡೆದಿದೆ.
ಬಿತುಲ್ ಜಿಲ್ಲೆಯಲ್ಲಿ ಗ್ರಾಮೀಣ ಕಂದಾಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ 24 ವರ್ಷದ ಕನು ಚವಾನ್ ವಿವಾಹ ಸಮಾರಂಭದಲ್ಲಿ ನಿಯಮ ಉಲ್ಲಂಘನೆಯಾಗಿದ್ದು, ಈಗ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.