
ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ರಾಜ್ಯದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತಿನಿತ್ಯ 5 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.
ಹೀಗಾಗಿ ಸಾರ್ವಜನಿಕರು ಭಯದಿಂದಲೇ ದಿನ ದೂಡುವಂತಾಗಿದ್ದು, ಕೊರೊನಾ ಹೆಮ್ಮಾರಿ ಯಾವಾಗ ತೊಲಗುತ್ತದೋ ಎಂಬ ನಿರೀಕ್ಷೆಯಲ್ಲಿದ್ದಾರೆ. ಇದಕ್ಕೆ ಈಗ ತಜ್ಞರು ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ.
ಇವರುಗಳ ಪ್ರಕಾರ, ಇನ್ನೂ 60 ದಿನಗಳ ಕಾಲ ಕೊರೊನಾ ಆರ್ಭಟಿಸಲಿದೆ ಎನ್ನಲಾಗಿದ್ದು, ಆ ಬಳಿಕ ಪ್ರಕರಣಗಳಲ್ಲಿ ಗಣನೀಯ ಇಳಿಕೆಯಾಗಲಿದೆ ಎನ್ನಲಾಗಿದೆ. ಹಾಗೆಂದು ಕೊರೊನಾ ಸೋಂಕು ಸಂಪೂರ್ಣವಾಗಿ ನಿರ್ಮೂಲನೆಯಾಗುವುದಿಲ್ಲ. ಬದಲಾಗಿ ಸಾರ್ವಜನಿಕರಲ್ಲೇ ಪ್ರತಿಕಾಯ ಬೆಳವಣಿಗೆಯಾಗುವ ಕಾರಣ ಸೋಂಕಿನ ತೀವ್ರತೆ ತಗ್ಗಲಿದೆ ಎನ್ನಲಾಗಿದೆ.
ಹೀಗಾಗಿ ಸಾರ್ವಜನಿಕರು ಅಲ್ಲಿಯವರೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಗುಂಪುಗುಂಪಾಗಿ ಸೇರದಂತೆ ನೋಡಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ತಜ್ಞರು ಹೇಳುತ್ತಾರೆ.