
ನವದೆಹಲಿ: ಕೊರೋನಾ ಕಾರಣದಿಂದ ಎಲ್ಲರೂ ಮನೆಯಲ್ಲಿ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗುವಂತೆ ತಿಳಿಸಲಾಗಿದೆ.
ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವೈದ್ಯರು, ನರ್ಸ್ ಗಳು ಪೌರಕಾರ್ಮಿಕರು ಮೊದಲಾದ ಕೊರೋನಾ ವಾರಿಯರ್ಸ್ ಹಾಗೂ ಸೋಂಕಿನಿಂದ ಗುಣಮುಖರಾದವರನ್ನು ಆಹ್ವಾನಿಸಿ ಗೌರವಿಸುವಂತೆ ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯಸರ್ಕಾರಗಳಿಗೆ ಸೂಚಿಸಲಾಗಿದೆ.
ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತ್ರಿವರ್ಣ ಧ್ವಜ ಹಾರಿಸಲಿದ್ದಾರೆ. ರಾಜ್ಯ ರಾಜಧಾನಿಗಳು, ಜಿಲ್ಲಾ, ತಾಲೂಕು ಕೇಂದ್ರಗಳು ಮತ್ತು ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಲಾಗಿದೆ. ಇದೇ ವೇಳೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಲು ತಿಳಿಸಲಾಗಿದೆ.
ಎಲ್ಲರೂ ಮನೆಯಲ್ಲಿಯೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗಬೇಕು. ಡಿಜಿಟಲ್ ಮಾಧ್ಯಮಗಳನ್ನು ಬಳಸಿಕೊಂಡು ರಾಷ್ಟ್ರೀಯ ಭಾವೈಕ್ಯತೆ ಕಾರ್ಯಕ್ರಮ ಆಯೋಜಿಸಬೇಕು. ಬಾಲ್ಕನಿ, ಕಿಟಕಿ, ಮಹಡಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ಸಂಭ್ರಮದಲ್ಲಿ ಭಾಗಿಯಾಗುವಂತೆ ಕರೆ ನೀಡಲು ತಿಳಿಸಲಾಗಿದ್ದು ಮಾರ್ಗಸೂಚಿ ನೀಡಲಾಗಿದೆ.