ನವದೆಹಲಿ: ದೇಶದ ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು 2021 ರ ಮಾರ್ಚ್ 31 ರೊಳಗೆ ಎಲ್ಲ ರಾಜ್ಯಗಳಲ್ಲಿ ಜಾರಿಗೆ ತರಲಾಗುವುದು.
ಕೇಂದ್ರ ಆಹಾರ, ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಈ ಕುರಿತು ಮಾತನಾಡಿ, ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷಿಯ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು 20 ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ. ಮುಂದಿನ ವರ್ಷ ಮಾರ್ಚ್ 31 ರೊಳಗೆ ದೇಶದ ಎಲ್ಲ ರಾಜ್ಯಗಳಲ್ಲಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸಿಕ್ಕಿಂ, ಒಡಿಶಾ, ಮಿಜೊರಾಂ ರಾಜ್ಯಗಳನ್ನು ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಈ ಮೂರು ರಾಜ್ಯಗಳ ಸೇರ್ಪಡೆಯೊಂದಿಗೆ ದೇಶದಲ್ಲಿ 20 ರಾಜ್ಯಗಳು ಇಂಟಿಗ್ರೇಟೆಡ್ ಮ್ಯಾನೇಜ್ಮೆಂಟ್ ಆಫ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್ ಗೆ ಸಂಪರ್ಕ ಹೊಂದಿದಂತಾಗಿದೆ. ಮುಂದಿನ ವರ್ಷ ಮಾರ್ಚ್ 31 ರೊಳಗೆ ಎಲ್ಲ ರಾಜ್ಯಗಳನ್ನು ಸೇರ್ಪಡೆ ಮಾಡುವುದರೊಂದಿಗೆ ದೇಶಾದ್ಯಂತ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಫಲಾನುಭವಿಗಳಿಗೆ ಉಚಿತವಾಗಿ ಪಡಿತರ ವಿತರಿಸಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ ಅಡಿ ಮೂರು ತಿಂಗಳು ಉಚಿತವಾಗಿ ಪಡಿತರ ನೀಡಲಾಗುವುದು ಎಂದು ಹೇಳಿದ್ದಾರೆ.