ನವದೆಹಲಿ: ಕಾರ್ಮಿಕ ಹಿತ ರಕ್ಷಣೆ ಕಾನೂನುಗಳನ್ನು ತಾತ್ಕಾಲಿಕವಾಗಿ ಅನೇಕ ರಾಜ್ಯ ಸರ್ಕಾರಗಳು ರದ್ದುಗೊಳಿಸಿವೆ. ಇದನ್ನು ವಿರೋಧಿಸಿ ಕೇಂದ್ರೀಯ ಕಾರ್ಮಿಕ ಸಂಘಗಳ(ಸಿಟಿಯು) ವತಿಯಿಂದ ಮೇ 22 ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಲಾಕ್ಡೌನ್ ಜಾರಿಯಾಗಿರುವುದರಿಂದ ದೇಶದಲ್ಲಿ ಕಾರ್ಮಿಕರ ಸ್ಥಿತಿ ಸಂಕಷ್ಟದಲ್ಲಿದೆ. ಕೆಲಸವಿಲ್ಲದೆ ದುಡಿಯುವ ವರ್ಗ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು ಇಂತಹ ಸಂದರ್ಭದಲ್ಲಿ ಕಾರ್ಮಿಕ ಹಿತರಕ್ಷಣೆಯ ಕಾನೂನುಗಳನ್ನು ಮೊಟಕುಗೊಳಿಸಲಾಗುತ್ತಿದೆ. ಇದನ್ನು ವಿರೋಧಿಸಿ 10 ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ.
ಕಾರ್ಮಿಕ ಹಿತರಕ್ಷಣೆ ಕಾನೂನು ಮೊಟಕುಗೊಳಿಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಕಾರ್ಮಿಕ ಸಂಘಟನೆಗಳ ಒತ್ತಡಕ್ಕೆ ಮಣಿದು ಆದೇಶವನ್ನು ವಾಪಸ್ ಪಡೆದಿದೆ. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ರಾಜ್ಯ ಸರ್ಕಾರದ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.