ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ಸಿ) ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ 77 ಹುದ್ದೆಗಳನ್ನು ಮೀಸಲಿರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 40 AE ಹುದ್ದೆಗಳ ನೇಮಕಾತಿಗೂ ಕೂಡ ಅರ್ಜಿ ಆಹ್ವಾನಿಸಲಾಗಿದೆ ಎಂದಿದ್ದಾರೆ.
ಕಳೆದ 7 ವರ್ಷಗಳ ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಕೆಎಎಸ್ ಹುದ್ದೆಗಳ ನೇಮಕಾತಿಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ನಂತರ ಈ ಕೆಎಎಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಮತ್ತೆ ನಮ್ಮ ಸರ್ಕಾರವೇ ಬರಬೇಕಾಯಿತು.
ಈ ಹಿಂದಿನ ಬಿಜೆಪಿ ಸರ್ಕಾರ ಆಡಳಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿತ್ತು. ಹಾಗಾಗಿ ಕಳೆದ 7 ವರ್ಷಗಳಿಂದ ಕೆಎಎಸ್ ನೇಮಕಾತಿ ನಡೆಸಿರಲಿಲ್ಲ. ಈಗ ನಮ್ಮ ಸರ್ಕಾರ ಇದನ್ನು ಪುನರಾರಂಭಿಸಿದೆ. ಮುಖ್ಯವಾಗಿ ಅವಕಾಶ ವಂಚಿತ ಅಭ್ಯರ್ಥಿಗಳ ಅನುಕೂಲಕ್ಕಾಗಿ ವಯೋಮಿತಿಯನ್ನು ಸಹ 3 ವರ್ಷಕ್ಕೆ ಹೆಚ್ಚಿಸುವ ಮೂಲಕ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ.
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸಹಾಯಕ ಆಯಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ಆಯಕ್ತರು, ತಹಶೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 ʼಗ್ರೂಪ್ ಎʼ ಹುದ್ದೆಗಳು ಮತ್ತು 225 ʼಗ್ರೂಪ್ ಬಿʼ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ದಿನಾಂಕ 04-03-2024 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು KPSC ವೆಬ್ ಸೈಟ್ : https://kpsconline.karnataka.gov.in ಗೆ ಭೇಟಿ ನೀಡಿ ಅನ್ಲೈನ್ಲ್ಲಿಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-04-2024 ಆಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿ ಈ ಉದ್ಯೋಗಾವಕಾಶವನ್ನು ಸದುಪಯೋಗ ಪಡೆದುಕೊಳ್ಳಿ.ರಾಜ್ಯದ ಯುವ ಜನತೆಗೆ ಉದ್ಯೋಗಾವಕಾಶಗಳನ್ನು ದೊರೆಕಿಸಿಕೊಡುವುದರ ಜೊತೆಗೆ ಉತ್ತಮ ಭವಿಷ್ಯ ಕಟ್ಟಿ ಕೊಡುವಲ್ಲಿ ನಮ್ಮ ಸರ್ಕಾರ ಬದ್ದವಾಗಿದ್ದು, ನುಡಿದಂತೆ ನಡೆಯುತ್ತಿದೆ ಎಂದಿದ್ದಾರೆ.