ನವದೆಹಲಿ: ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಂತರವೇ ಸಂಪುಟ ವಿಸ್ತರಣೆ ಮಾಡಲಾಗುವುದು. ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭೇಟಿ ನೀಡಲಿದ್ದಾರೆ. ಕಾರ್ಯಕಾರಿಣಿ ಸಭೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಸಾಧ್ಯತೆ ಇದೆ.
ರಾಜ್ಯ ಬಿಜೆಪಿ ನಾಯಕರಿಗೆ ವರಿಷ್ಠರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಿದ್ದು, ಅವರು ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಒಪ್ಪಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಆದರೆ, ಮುಖ್ಯಮಂತ್ರಿಯವರೇ ನಾನು ಸಂಪುಟ ವಿಸ್ತರಣೆ ವಿಚಾರವಾಗಿ ಬಂದಿಲ್ಲವೆಂದು ಸ್ಪಷ್ಟನೆ ನೀಡಿದ್ದರು. ಜೆ.ಪಿ. ನಡ್ಡಾ ರಾಜ್ಯಕ್ಕೆ ಭೇಟಿ ನೀಡಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.