ಕೊರೊನಾ ಸಂಕಷ್ಟದ ನಡುವೆಯೂ ಆಡಳಿತ ಪಕ್ಷ ಬಿಜೆಪಿಯಲ್ಲಿ ನಡೆದ ದಿಢೀರ್ ಬೆಳವಣಿಗೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿತ್ತು. ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ 20ಕ್ಕೂ ಅಧಿಕ ಶಾಸಕರ ಪ್ರತ್ಯೇಕ ಸಭೆ ಕುತೂಹಲಕ್ಕೆ ಕಾರಣವಾಗಿತ್ತು.
ಇದಾದ ನಂತರ ಗೃಹ ಸಚಿವ ಅಮಿತ್ ಶಾ ಅವರೇ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕರೆ ಮಾಡಿ ಭಿನ್ನಮತೀಯ ಚಟುವಟಿಕೆಗೆ ತಲೆಕೆಡಿಸಿಕೊಳ್ಳದೆ ಕೊರೊನಾ ಸಂಕಷ್ಟ ಪರಿಹಾರಕ್ಕೆ ಮುಂದಾಗಿ ಎಂದು ಹೇಳಿರುವುದರಿಂದ ಸದ್ಯಕ್ಕೆ ಭಿನ್ನಮತ ಶಮನವಾಗಿದೆ.
ಇದರ ಮಧ್ಯೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯೊಂದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಬದಲಾವಣೆಗೆ ಕೆಲ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಪ್ರಹ್ಲಾದ್ ಜೋಶಿ ಅಥವಾ ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಅವರ ಗುರಿಯಾಗಿದೆ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ನ ಐದು ಮಂದಿ ಶಾಸಕರುಗಳು ರಾಜೀನಾಮೆ ನೀಡಲು ರೆಡಿ ಇದ್ದಾರೆ. ಹೈಕಮಾಂಡ್ ಹೇಳಿದರೆ ನಾಳೆಯೇ ರಾಜೀನಾಮೆ ಕೊಡಿಸಲು ಸಿದ್ಧ ಎಂಬ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ಗೊಂದಲ ಹುಟ್ಟು ಹಾಕುವ ಸಲುವಾಗಿ ರಮೇಶ್ ಈ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.