ಮಾರಣಾಂತಿಕ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗ ಮತ್ತೊಮ್ಮೆ ಲಾಕ್ ಡೌನ್ ಮುಂದುವರೆಸಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಮೇ 31 ರವರೆಗೆ ಜಾರಿಯಲ್ಲಿರಲಿದೆ.
ಈ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅನುಸರಿಸಬೇಕಾದ ಕೆಲವೊಂದು ಮಹತ್ತರ ಜವಾಬ್ದಾರಿಗಳ ಕುರಿತು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿದ್ದು, ಇದು ಮುಖ್ಯಮಂತ್ರಿ ಯಡಿಯೂರಪ್ಪರನ್ನು ಸಂದಿಗ್ದತೆಗೆ ಸಿಲುಕಿಸಿದೆ ಎನ್ನಲಾಗಿದೆ.
ಈ ಹಿಂದೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಪಾಲಿಸುತ್ತಿದ್ದ ರಾಜ್ಯ ಸರ್ಕಾರ ಈಗ ಸ್ವತಃ ತೀರ್ಮಾನ ಕೈಗೊಳ್ಳುವ ಅನಿವಾರ್ಯತೆಗೆ ಸಿಲುಕಿದೆ. ಇದರ ಮಧ್ಯೆ ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳೂ ಕಳವಳಕ್ಕೀಡು ಮಾಡಿದೆ.
ಹೀಗಾಗಿ ಒಂದೊಮ್ಮೆ ಆದಾಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ನೀಡಿರುವ ಅಧಿಕಾರವನ್ನು ಬಳಸಿಕೊಂಡರೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾದರೆ ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ವಹಿಸಿಕೊಳ್ಳಬೇಕಿದೆ.
ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಬಲು ಎಚ್ಚರಿಕೆಯ ಹೆಜ್ಜೆ ಇಡಲು ತೀರ್ಮಾನಿಸಿದೆ ಎನ್ನಲಾಗಿದೆ.