ರಾಜ್ಯದಲ್ಲಿ ಕೊರೊನಾ ಆರ್ಭಟ ನಡೆಸುತ್ತಿರುವ ಮಧ್ಯೆ ಕಳೆದೆರಡು ತಿಂಗಳಿನಿಂದ ತಣ್ಣಗಿದ್ದ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆ ಗರಿಗೆದರಿದೆ. ರಾಜ್ಯಸಭಾ ಚುನಾವಣೆ ಇದಕ್ಕೆ ಕಾರಣವಾಗಿದ್ದು, ರಮೇಶ್ ಕತ್ತಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು 20ಕ್ಕೂ ಅಧಿಕ ಶಾಸಕರು ಪ್ರತ್ಯೇಕ ಸಭೆ ನಡೆಸುವ ಮೂಲಕ ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಇದಕ್ಕೂ ಮೊದಲು ಶಾಸಕ ಉಮೇಶ್ ಕತ್ತಿ, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿ ತಾವು ಈ ಹಿಂದೆ ಮಾತು ನೀಡಿದಂತೆ ರಮೇಶ್ ಕತ್ತಿಗೆ ರಾಜ್ಯಸಭಾ ಟಿಕೆಟ್ ನೀಡಿ ಎಂಬ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಆದರೆ ಯಾವುದೇ ಸ್ಪಷ್ಟ ಭರವಸೆ ಸಿಗದ ಹಿನ್ನೆಲೆಯಲ್ಲಿ ಔತಣಕೂಟದ ನೆಪದಲ್ಲಿ ಪ್ರತ್ಯೇಕ ಸಭೆ ನಡೆದಿದೆ ಎಂದು ಹೇಳಲಾಗಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ ಈ ಸಭೆ ನಡೆದಿದ್ದು, ಇದರಲ್ಲಿ ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ್, ಉಮೇಶ್ ಕತ್ತಿ ಸೇರಿದಂತೆ 20ಕ್ಕೂ ಅಧಿಕ ಶಾಸಕರು ಪಾಲ್ಗೊಂಡಿದ್ದರೆಂದು ಹೇಳಲಾಗಿದೆ. ಗಮನಾರ್ಹ ಸಂಗತಿ ಎಂದರೆ ಇವರಲ್ಲಿ ಬಹುತೇಕರು ಯಡಿಯೂರಪ್ಪನವರ ಆಪ್ತ ವಲಯದಲ್ಲಿದ್ದವರು.
ವಿವಿಧ ಕಾರಣಗಳಿಗಾಗಿ ಯಡಿಯೂರಪ್ಪನವರ ವಿರುದ್ಧ ಅಸಮಾಧಾನಗೊಂಡಿದ್ದ ಶಾಸಕರುಗಳಿಗೆ ಈಗ ವೇದಿಕೆ ಸಿಕ್ಕಿದ್ದು, ರಾಜ್ಯಸಭಾ ಚುನಾವಣೆ ಟಿಕೆಟ್ ಘೋಷಣೆ ಬಳಿಕ ರಾಜ್ಯ ರಾಜಕಾರಣ ಮತ್ತಷ್ಟು ಮಹತ್ವದ ತಿರುವು ಪಡೆದುಕೊಳ್ಳಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.